ವಿಟ್ಲ: ಕಾಂಗ್ರೆಸ್ ಕಚೇರಿಯಲ್ಲಿ ಚುನಾವಣೆ ಸಿದ್ಧತಾ ಪೂರ್ವಭಾವಿ ಸಮಾಲೋಚನೆ ಸಭೆ
ವಿಟ್ಲ: ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ವಿಧಾನಸಭೆ ಚುನಾವಣೆ ಸಿದ್ಧತೆಯ ಬಗ್ಗೆ ಪೂರ್ವಭಾವಿ ಸಮಾಲೋಚನೆ ಸಭೆ ನಡೆಯಿತು.
ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರ ಪಡೆಯಲು ಕಾರ್ಯಕರ್ತರು, ಮುಖಂಡರುಗಳೆಲ್ಲರೂ ಸಮರೋಪಾದಿಯಲ್ಲಿ ಪ್ರಯತ್ನಿಸಬೇಕಾಗಿದೆ. ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಗೆಲ್ಲಿಸಲು ಕಟಿಬದ್ಧರಾಗಬೇಕಾಗಿದೆ. ನಾವು ಪ್ರತಿಸ್ಪರ್ಧಿಗಳ ದೌರ್ಬಲ್ಯಗಳನ್ನು ಲೆಕ್ಕ ಹಾಕುವುದನ್ನು ಬಿಟ್ಟು ಮತದಾರರಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಬೇಕಾದ ಎಲ್ಲಾ ಕಾರ್ಯ ತಂತ್ರಗಳನ್ನು ರೂಪಿಸಬೇಕಾಗಿದೆ ಎಂದು ತಿಳಿಸಿದರು.
ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಮಾತನಾಡಿ, ಕ್ಷೇತ್ರದ ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ಸಾಮಾಜಿಕ ಸೇವೆ ನನ್ನ ಬದುಕಿನ ನಿರಂತರ ಪ್ರಕ್ರಿಯೆ. ಪುತ್ತೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಾಸಕನಾಗಿ ನ್ಯಾಯಯುತವಾಗಿ ದುಡಿಯುತ್ತೇನೆ ಎಂದು ತಿಳಿಸಿದ ಅವರು ಎ.19 ರಂದು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸಹಸ್ರಾರು ಕಾರ್ಯಕರ್ತರು, ಅಭಿಮಾನಿಗಳು ಸಹಕರಿಸ ಬೇಕೆಂದು ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಸದಸ್ಯ ಎಂ.ಎಸ್ ಮಹಮ್ಮದ್, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಲುಕ್ಮನ್ ಬಂಟ್ವಾಳ, ಕಾಂಗ್ರೆಸ್ ಉಸ್ತುವಾರಿ ನೂರುದ್ದೀನ್ ಸಾಲ್ಮರ, ಯುವ ಕಾಂಗ್ರೆಸ್ ಉಸ್ತುವಾರಿ ಸಜಿತ್ ಕಣ್ಣೂರು, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮಾನಾಥ ಶೆಟ್ಟಿ, ಪ್ರವೀಣಚಂದ್ರ ಆಳ್ವ, ಕಾಂಗ್ರೆಸ್ ವಲಯಾಧ್ಯಕ್ಷರು, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ ಕಾರ್ಯಕ್ರಮ ನಿರೂಪಿಸಿದರು.




