February 3, 2026

ರಮಾನಾಥ ರೈಯವರಿಂದ ಕೊಲ್ಲೂರು, ಕುದ್ರೋಳಿ ದೇವಸ್ಥಾನ, ಬಂದರು ಕೇಂದ್ರ ಮಸೀದಿ ದರ್ಗಾ, ಮಂಗಳೂರು ಬಿಷಪ್ ಗೆ ಭೇಟಿ

0
IMG-20230418-WA0030.jpg

ಮಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಂಗಳವಾರ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕೊಲ್ಲೂರು ಮುಕಾಂಬಿಕೆ ದೇವಸ್ಥಾನ, ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ, ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತದ ಬಿಷಪ್, ಬಂದರು ಕೇಂದ್ರ ಜುಮ್ಮಾ ಮಸೀದಿ ದರ್ಗಾಕ್ಕೆ ಭೇಟಿ ನೀಡಿ ಅವರು ಪ್ರಾರ್ಥನೆ ಸಲ್ಲಿಸಿದರು.

ಬೆಳಿಗ್ಗೆ ನಸುಕಿನ ವೇಳೆಯಲ್ಲಿ ಕೊಲ್ಲೂರು ಶ್ರೀ ಮುಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಂಗಳೂರಿಗೆ ಆಗಮಿಸಿ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಕುದ್ರೋಳಿ ದೇವಸ್ಥಾನದ ಧರ್ಮದರ್ಶಿ ಸಾಯಿರಾಮ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧೀರಜ್ ಪಾಲ್, ಕು. ಅಪ್ಪಿ, ವಿಶ್ವಾಸ್ ಕುಮಾರ್ ದಾಸ್, ಶಶಿಧರ್ ಹೆಗ್ಡೆ ಉಪಸ್ಥಿತರಿದ್ದರು.

ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತದ ಬಿಷಪ್ ರೆ. ಫಾ. ಪೀಟರ್ ಪೌಲ್ ಸಲ್ದಾನರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು. ಈ ವೇಳೆಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ನವೀನ್ ಆರ್. ಡಿಸೋಜ, ಕಾರ್ಪೊರೇಟರ್ ಗಳಾದ ವಿನಯ್ ರಾಜ್, ಶಶಿಧರ್ ಹೆಗ್ಡೆ, ಕೆ. ಪಿ. ಸಿ. ಸಿ. ಸದಸ್ಯ ಪಿಯೂಸ್ ಎಲ್. ರಾಡ್ರಿಗಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಸಿದ್ದಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

ಬಂದರು ಕೇಂದ್ರ ಜುಮ್ಮಾ ಮಸೀದಿ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ವೇಳೆ ಮಾಜಿ ಮೇಯರ್ ಅಶ್ರಫ್, ಕಾರ್ಪೊರೇಟರ್ ಸಂಶುದ್ದಿನ್ ರವೂಫ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಸಿದ್ದಕಟ್ಟೆ ಮುಂತಾದವರು ಉಪಸ್ಥಿತರಿದ್ದರು.

ಏಪ್ರಿಲ್ 20, ಗುರುವಾರ ಬಂಟ್ವಾಳದಲ್ಲಿ ರಮಾನಾಥ ರೈ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಗೆಲುವಿಗೆ ಪ್ರಾರ್ಥಿಸಿ ಸರ್ವ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇನ್ನುಳಿದಂತೆ ಸ್ಥಳೀಯ ಧಾರ್ಮಿಕ ಕ್ಷೇತ್ರಗಳಿಗೆ ಗುರುವಾರ ಮುಂಜಾನೆ ಅವರು ಭೇಟಿ ನೀಡಲಿದ್ದು, ಬಳಿಕ ಬೆಳಿಗ್ಗೆ 9 ಗಂಟೆಯಿಂದ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಳದಿಂದ ಮೆರವಣಿಗೆಯಲ್ಲಿ ಸಾಗಿ 12:35ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!