ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಮೃತ್ಯು
ರಾಮನಗರ: ಚನ್ನಪಟ್ಟಣ ಬೈಪಾಸ್ನಲ್ಲಿ ಇನ್ನೋವಾ ಮತ್ತು ಆಲ್ಟೋ ಕಾರಿನ ನಡುವೆ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ 5 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಕೆಂಗೇರಿ ಸಮೀಪದ ಚೈತನ್ಯ ನಗರ ನಿವಾಸಿಗಳಾದ ರವಿ ಪೂಜಾರ್ (46), ಇಂಚರ ಪೂಜಾರ್ (15), ಸಿರಿ ಪೂಜಾರ್ (3) ಲಕ್ಷ್ಮಿ ಪೂಜಾರ್ (40) ಶಾಂತಲಾ ಪೂಜಾರ್ (8) ಮೃತ ದುರ್ದೈವಿಯಾಗಿದ್ದಾರೆ.
ಮೃತರು ಒಂದೇ ಕುಟುಂಬದವರು ಎಂದು ತಿಳಿದು ಬಂದಿದ್ದು, ಬೆಂಗಳೂರಿನ ನಿವಾಸಿಗಳಾದ ಇವರು ಹುಣಸೂರಿನಲ್ಲಿ ಸ್ನೇಹಿತರ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಲ್ಟೋ ಕಾರಿನಲ್ಲಿ ತೆರಳುತ್ತಿದ್ದರು.
ಈ ವೇಳೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡ ಸಮೀಪದ ಬೈಪಾಸ್ ರಸ್ತೆಯಲ್ಲಿ ಇವರು ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರು ಡಿವೈಡರ್ ದಾಟಿ ರಸ್ತೆಯ ಮತ್ತೊಂದು ಬದಿಗೆ ನೆಗೆದಿದೆ.
ಈ ಸಂದರ್ಭದಲ್ಲಿ ಮೈಸೂರು ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರಿಗೆ ಆಲ್ಟೋ ಕಾರು ಡಿಕ್ಕಿ ಹೊಡೆದ ಪರಿಣಾಮ ಆಲ್ಟೋ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.
ಘಟನೆಗೆ ಸಂಬಂಧಿಸಿದಂತೆ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




