ಪ್ರತಿಭಟನೆಯ ವೇಳೆ ಹಿಂಸಾಚಾರ: ಇಂಟರ್ನೆಟ್ ಸ್ಥಗಿತ, ಸ್ಥಳಕ್ಕೆ ಆಗಮಿಸಿದ ಸೇನೆ
ಇಂಫಾಲ್: ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿರುವ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ ಇಂಟರ್ನೆಟ್ ಸ್ಥಗಿತಗೊಂಡಿದ್ದು, ಸ್ಥಳಕ್ಕೆ ಸೇನೆ ಆಗಮಿಸಿದೆ.
ಮಣಿಪುರ ಹೊತ್ತಿ ಉರಿಯುತ್ತಿದೆ. ಇಂಫಾಲ್, ಚುರಾಚಂದ್ಪುರ ಹಾಗೂ ಕಾಂಗ್ಪೋಕ್ಪಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಸಿಕ್ಕ ಸಿಕ್ಕಲ್ಲೆಲ್ಲಾ ಪ್ರತಿಭಟನಾಕಾರರು ಬೆಂಕಿ ಹಚ್ಚುತ್ತಿದ್ದಾರೆ. ಇದರ ಬೆನ್ನಲ್ಲೇ ಮಣಿಪುರದ 8 ಜಿಲ್ಲೆಗಳಲ್ಲಿ ಕರ್ಫೂ ವಿಧಿಸಲಾಗಿದೆ. ಜೊತೆಗೆ ಹಿಂಸಾಚಾರವನ್ನು ನಿಯಂತ್ರಿಸಲು ಮಣಿಪುರ ಸರ್ಕಾರ ರಾಜ್ಯದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.
ಹೆಚ್ಚುತ್ತಿರುವ ಹಿಂಸಾಚಾರವನ್ನು ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್ಗೆ ಕರೆ ನೀಡಲಾಗಿದೆ. ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಸೇನೆ ಮತ್ತು ಅಸ್ಸಾಂ ರೈಫಲ್ಸ್ನಿಂದ ಇಂದು ಧ್ವಜ ಮೆರವಣಿಗೆ ನಡೆಸಲಾಯಿತು. ಹಿಂಸಾಚಾರದ ನಂತರ ರಾಜ್ಯದ ವಿವಿಧ ಪ್ರದೇಶಗಳಲ್ಲಿ 7,500ಕ್ಕೂ ಹೆಚ್ಚು ಜನರಿಗೆ ಸೇನಾ ಶಿಬಿರಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಆಶ್ರಯ ನೀಡಲಾಯಿತು.




