ಗದಗ–ಬೆಟಗೇರಿ ನಗರಸಭೆ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಶ್ರೀರಾಮ ಸೇನೆ ಕಾರ್ಯಕರ್ತರು
ಗದಗ: ಗದಗ–ಬೆಟಗೇರಿ ಅವಳಿ ನಗರದಲ್ಲಿರುವ ಸಾರ್ವಜನಿಕ ಮೂತ್ರಾಲಯಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಮಂಗಳವಾರ ಗದಗ–ಬೆಟಗೇರಿ ನಗರಸಭೆ ಕಾರಿಡಾರ್ ಹಾಗೂ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿ ಹೊಸ ರೀತಿಯಲ್ಲಿ ಪ್ರತಿಭಟಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹಾಗೂ ಗದಗ ಶಾಸಕ ಎಚ್.ಕೆ.ಪಾಟೀಲ ಸಾರ್ವಜನಿಕರಿಗೆ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫರಾಗಿದ್ದಾರೆ ಎಂದು ಅವರ ವಿರುದ್ಧ ಘೋಷಣೆ ಕೂಗಿದರು.
‘ಅವಳಿ ನಗರದಲ್ಲಿ ಸಾರ್ವಜನಿಕ ಮೂತ್ರಾಲಯಗಳ ಸ್ಥಿತಿ ತೀರಾ ಕೆಟ್ಟದಾಗಿದೆ. ನಗರದ ಕೆಲವೆಡೆ ಇದ್ದ ಮೂತ್ರಾಲಯಗಳನ್ನು ಕೆಡವಲಾಗಿದೆ. ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಆವರಣದಲ್ಲಿ ಮೂತ್ರವಿಸರ್ಜನೆ ಮಾಡಿ ಪ್ರತಿಭಟಿಸಲಾಗುವುದು ಎಂದು ಅಧಿಕಾರಿಗಳಿಗೆ ವಾರದ ಹಿಂದೆಯೇ ಎಚ್ಚರಿಸಲಾಗಿತ್ತು. ಅಧಿಕಾರಿಗಳು ಸ್ಪಂದಿಸದ ಕಾರಣ ಪ್ರತಿಭಟನೆ ಅನಿವಾರ್ಯವಾಯಿತು’ ಎಂದು ಶ್ರೀರಾಮ ಸೇನೆ ಧಾರವಾಡ ವಿಭಾಗೀಯ ಸಂಚಾಲಕ ರಾಜು ಖಾನಪ್ಪನವರ ಹೇಳಿದರು.
ಪ್ರತಿಭಟನೆ ವೇಳೆ ಸ್ಥಳದಲ್ಲಿ ಸಾಕಷ್ಟು ಮಂದಿ ಪೊಲೀಸರು ಇದ್ದರೂ ಪ್ರತಿಭಟನಕಾರರು ನಗರಸಭೆ ಆವರಣದ ವಿವಿಧೆಡೆ ಮೂತ್ರವಿಸರ್ಜನೆ ಮಾಡಿದರು.