16 ಮತಗಳ ಅಂತರದಿಂದ ಸೋಲು: ಕೋರ್ಟ್ ಮೊರೆ ಹೋಗಲು ಸೌಮ್ಯ ರೆಡ್ಡಿ ನಿರ್ಧಾರ
ಬೆಂಗಳೂರು: ಕೇವಲ 16 ಮತಗಳ ಅಂತರದಿಂದ ಸೋತ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಕೋರ್ಟ್ಗೆ ಮೊರೆ ಹೋಗಲು ನಿರ್ಧರಿಸಿದ್ದಾರೆ.
ಮೊದಲ ಬಾರಿಗೆ ಮತ ಎಣಿಕೆ ನಡೆದಾಗ 160 ಮತಗಳಿಂದ ಗೆದ್ದಿರುವುದಾಗಿ ಘೋಷಿಸಲಾಗಿತ್ತು. ಆದರೆ ತದನಂತರ ಸಂಸದ ತೇಜಸ್ವಿ ಸೂರ್ಯ, ಆರ್. ಅಶೋಕ್ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶಿಸಿ ಅಕ್ರಮ ನಡೆಸಿದ್ದು, ಇಂದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ತಿಳಿಸಿದ್ದಾರೆ.
ಮತ ಎಣಿಕೆಯು ಮೊದಲ ಸುತ್ತಿನಿಂದಲೂ ಹಾವು-ಏಣಿಯಾಟ ನಡೆಯುತ್ತಲೇ ಇತ್ತು. 16 ಸುತ್ತಿನ ಮತ ಎಣಿಕೆ ಕಾರ್ಯ ಮುಗಿದ ಬಳಿಕ ಕಾಂಗ್ರೆಸ್ನ ಸೌಮ್ಯಾರೆಡ್ಡಿ 294 ಮತಗಳಿಂದ ಮುನ್ನಡೆ ಸಾಧಿಸಿರುವುದನ್ನು ಚುನಾವಣಾ ಫಲಿತಾಂಶದ ವೆಬ್ಸೈಟ್ನಲ್ಲಿ ಪ್ರಕಟಿಸಲಾಯಿತು. ನಂತರ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅಂಚೆ ಮತಗಳ ಮರು ಎಣಿಕೆಗೆ ಒತ್ತಾಯಿಸಿದರು.
ಒಟ್ಟು ಮೂರು ಬಾರಿ ಮರು ಎಣಿಕೆ ಮಾಡಲಾಯಿತು. ನಾಲ್ಕು ಬಾರಿ ಮತ್ತೆ ಮತ್ತೆ ಎಣಿಸಿದರೂ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಘೋಷಿಸಿದರು.
ಇನ್ನು ಈ ಕುರಿತು ಟ್ವೀಟ್ ಮಾಡಿದ ಸೌಮ್ಯ ರೆಡ್ಡಿ, ವಿಧಾನಸಭೆ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವದಿಸಿದ ಜಯನಗರದ ನನ್ನ ಪ್ರೀತಿಯ ಜನತೆಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ನನ್ನ ಬೆನ್ನೆಲುಬಾಗಿ ನಿಂತ ನಾಯಕರಿಗೆ ಅನಂತ ಧನ್ಯವಾದಗಳು. ಕಷ್ಟದ ಸಂದರ್ಭದಲ್ಲಿ ಒಗ್ಗಟ್ಟು ಪ್ರದರ್ಶಿಸಿ ನನ್ನ ಜೊತೆ ನಿಂತ ಸಾವಿರಾರು ಜನರಿಗೆ ಇದೇ ಸಂದರ್ಭದಲ್ಲಿ ನಮನಗಳನ್ನು ಸಲ್ಲಿಸುತ್ತೇನೆ. ಫಲಿತಾಂಶ ಪ್ರಕಟಣೆ ಸಂದರ್ಭದಲ್ಲಿ ನಡೆದಂತಹ ಮೋಸ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆ ವಿರುದ್ಧ ಹೋರಾಡಲು ನಿಮ್ಮ ಬೆಂಬಲವನ್ನು ನಾನು ಕೈಮುಗಿದು ಕೋರುತ್ತಿದ್ದೇನೆ ಎಂದು ಹೇಳಿದ್ದಾರೆ.




