ಕುಂದಾಪುರ: ವಲಸೆ ಕಾರ್ಮಿಕರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ
ಕುಂದಾಪುರ: ವಲಸೆ ಕಾರ್ಮಿಕರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ ನಡೆದಿದೆ.
ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್ ಸಂಗಮೇಶ (42) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಾಗೂ ಈತನೊಂದಿಗೆ ಇದ್ದ ಇನ್ನೋರ್ವ ವಲಸೆ ಕಾರ್ಮಿಕ ಮಂಡ್ಯ ಮೂಲದ ರಾಜಾ (36) ಕೊಲೆ ಮಾಡಿದ ಆರೋಪಿ.
ಸಂಗಪ್ಪ ಹಾಗೂ ರಾಜಾ ಕುಂದಾಪುರದಲ್ಲಿ ವಲಸೆ ಕಾರ್ಮಿಕರಾಗಿದ್ದು, ಕೆಲಸವಿದ್ದಾಗ ಕುಂದಾಪುರಕ್ಕೆ ತೆರಳಿ ಅಲ್ಲಿಯೇ ಉಳಿಯುತ್ತಿದ್ದರು. ಈ ವೇಳೆ ಮದ್ಯ ಸೇವಿಸಿದ್ದ ರಾಜಾ ಹಾಗೂ ಸಂಗಪ್ಪ ನಡುವೆ ಕ್ಷುಲ್ಲಕ ಕಾರಣಕ್ಕೆ ಚಕಮಕಿ ನಡೆದಿದ್ದು, ಶೆಡ್ ಎದುರಿನ ಮನೆ ಪಂಚಾಂಗದ ಮೇಲೆ ಮಲಗಿದ್ದ ಸಂಗಪ್ಪನ ತಲೆಯ ಮೇಲೆ ರಾಜಾ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದಾನೆ. ಬಳಿಕ ಅಲ್ಲಿಯೇ ಸಮೀಪದಲ್ಲಿದ್ದ ಮಾಲೀಕನ ಮನೆಗೆ ಬಂದು ಮಾಹಿತಿ ನೀಡಿದ್ದು ಆತನನ್ನು ಹಿಡಿದುಕೊಂಡು ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.




