ಬಿಜೆಪಿನಾಯಕರ ಭಾವಚಿತ್ರವಿರುವ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ: ಆರೋಪಿಗಳಿಗೆ ಪೊಲೀಸರಿಂದ ಹಿಗ್ಗಾಮುಗ್ಗ ಥಳಿತ-ಫೋಟೋ ವೈರಲ್
ಈ ಬಗ್ಗೆ ದ.ಕ ಎಸ್ಪಿ ಹೇಳಿದ್ದೇನು?
ಪುತ್ತೂರು: ಬಿಜೆಪಿ ನಾಯಕರ ಭಾವಚಿತ್ರವಿರುವ ಬ್ಯಾನರಿಗೆ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾದ ಆರೋಪಿಗಳಿಗೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಭಾವಚಿತ್ರವನ್ನು ಹಾಕಿ, ಅದರಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಎಂಬ ಶೀರ್ಷಿಕೆ ನೀಡಿ, ಅದಕ್ಕೆ ಚಪ್ಪಲಿ ಹಾರ ಹಾಕಿದ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 9 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು.
ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನುವ ಯುವಕರ ಫೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಡೆದಾಡಲು ಕಷ್ಟಪಡುವ ರೀತಿಯ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಕಂಡುಬಂದಿದೆ.
ಈ ಬಗ್ಗೆ ಡಿವೈಎಸ್ಪಿ ಅವರಲ್ಲಿ ವಿಚಾರಿಸಿದಾಗ ಪುತ್ತೂರು ನಗರ ಠಾಣೆಯಲ್ಲಿ ಅಪರಾಧ ಸಂಖ್ಯೆ 37/23 ರಲ್ಲಿ ದಸ್ತಗಿರಿ ಮಾಡಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವುದಾಗಿ ಸಾಮಾಜಿಕ ಜಾಲತಾಣ ಗಳಲ್ಲಿ ಸುದ್ದಿ ಪ್ರಸಾರ ವಾಗುತ್ತಿದ್ದು, ಈ ಬಗ್ಗೆ ಸತ್ಯಾಂಶ ತಿಳಿದುಕೊಳ್ಳಲು ವಿಚಾರಣೆ ಕೈಗೊಳ್ಳಲಾಗುವುದು ಎಂದಿದ್ದಾರೆ.





