ಹಿಂದಿನ ಬಿಜೆಪಿ ಸರಕಾರ ಕೈಗೊಂಡ ಎಲ್ಲಾ ಕಾಮಗಾರಿಗಳಿಗೆ ಹಣ ಪಾವತಿಗೆ ತಡೆ:
ರಾಜ್ಯ ಸರಕಾರ ಸುತ್ತೋಲೆ
ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಜಯಗಳಿಸಿ ಸರ್ಕಾರ ರಚನೆ ಮಾಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿ. ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಸರ್ಕಾರ ಮುನ್ನಡೆಸುತ್ತಿದ್ದಾರೆ.
ಮಾರ್ಚ್ 22ರ ಸೋಮವಾರ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಏಕ್ರೂಪ್ ಕೌರ್ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳ ಟಿಪ್ಪಣಿ ಅನ್ವಯ ಈ ಸುತ್ತೋಲೆ ಪ್ರಕಟವಾಗಿದೆ.
ಸರ್ಕಾರದ ಎಲ್ಲಾ ಇಲಾಖೆಗಳು/ ನಿಗಮಗಳು/ ಮಂಡಳಿ/ ಪ್ರಾಧಿಕಾರಗಳ ಹಿಂದಿನ ಕಾಮಗಾರಿಗಳನ್ನು ತಡೆಹಿಡಿಯುವ ಬಗ್ಗೆ ಎಂಬ ವಿಚಾರವನ್ನು ಸುತ್ತೋಲೆ ಒಳಗೊಂಡಿದೆ. ಈ ಮೂಲಕ ಹಿಂದಿನ ಸರ್ಕಾರದ ಕಾಮಗಾರಿಗಳನ್ನು ತಡೆ ಹಿಡಿಯಲು ಸೂಚನೆ ನೀಡಲಾಗಿದೆ.
ಸೋಮವಾರ ಹೊರಡಿಸಿರುವ ಸುತ್ತೋಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ, ಈ ಹಿಂದಿನ ಸರ್ಕಾರ ಕೈಗೊಂಡಿದ್ದ ಎಲ್ಲಾ ಇಲಾಖೆಗಳ ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ/ ಮಂಡಳಿ/ ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲಾ ಮುಂದಿನ ಹಣ ಬಿಡುಗಡೆ/ ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ತಿಳಿಸಲಾಗಿದೆ ಎಂದು ಹೇಳಿದೆ.
ರಾಜ್ಯದಲ್ಲಿ ಪ್ರತಿ ಬಾರಿಯೂ ಹೊಸ ಸರ್ಕಾರ ರಚನೆಗೊಂಡಾಗ ಹಿಂದಿನ ಸರ್ಕಾರದ ಕಾಮಗಾರಿಗಳನ್ನು ತಡೆ ಹಿಡಿಯಲಾಗುತ್ತದೆ. ಸಚಿವರಾಗಿ ನಿಯೋಜನೆಗೊಂಡವರು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿ ಅತ್ಯಗತ್ಯ ಇರುವುದಕ್ಕೆ ಮಾತ್ರ ಒಪ್ಪಿಗೆ ನೀಡುತ್ತಾರೆ.
ಹೊಸ ಸರ್ಕಾರ ರಚನೆಯಾದಾಗ ಅವರು ಹೊಸದಾಗಿ ಬಜೆಟ್ ಮಂಡನೆ ಮಾಡುತ್ತಾರೆ. ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಗೆ ಅನುಗುಣವಾಗಿ ಬಜೆಟ್ ತಯಾರಿ ನಡೆಯುತ್ತದೆ. ಜುಲೈನಲ್ಲಿ ಹೊಸ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಘೋಷಣೆ ಮಾಡಿದ್ದಾರೆ.




