ಕಾರು, ಲಾರಿ ನಡುವಿನ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು
ಭರಮಸಾಗರ: ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರ ವಿಜಾಪುರ ಗೇಟ್ ಬಳಿ ಸಂಭವಿಸಿದ ಫಾರ್ಚುನರ್ ಕಾರು ಮತ್ತು ಲಾರಿ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೂ.12ರ ಸೋಮವಾರ ಮುಂಜಾನೆ ನಡೆದಿದೆ.
ಬೆಂಗಳೂರು ಮೂಲದ ಕುಟುಂಬವೊಂದು ಗೋವಾ ಪ್ರವಾಸ ಮುಗಿಸಿ ಹಿಂತಿರುಗುವ ವೇಳೆ ವಿಜಾಪುರ ಬಳಿ ಲಾರಿಯನ್ನು ಹಿಂದಿಕ್ಕುವ ವೇಳೆ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.
ಲಾರಿಗೆ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಸುಮಾರು 25 ವರ್ಷದ ಒರ್ವ ಪುರುಷ ಮತ್ತು 28 ವರ್ಷದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಹೆಸರುಗಳನ್ನು ಪತ್ತೆಹಚ್ಚಲು ಇನ್ನೂ ಸಾಧ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.




