ಮುಲ್ಕಿ ವ್ಯಾಪ್ತಿಯಲ್ಲಿ ಮನೆ ಕಳವು: ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು
ಮಂಗಳೂರು: ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳದ ಗಣೇಶ ನಾಯ್ಕ್(26), ಕೊಡಗಿನ ರಂಜಿತ್ ಕೆ.ಆರ್(26) ಬಂಧಿತ ಆರೋಪಿಗಳು. ಬಂಧಿತರಿಂದ 1 ಕೆಜಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ದಿನಾಂಕ: 15-01-2023 ರಂದು ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಶ್ರೀ ಐಕಳ ಹರೀಶ್ ಶೆಟ್ಟಿ ಎಂಬವರ ಮನೆಯ ಎದುರಿನ ಬಾಗಿಲಿನ ಲಾಕನ್ನು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವುಗೈದಿದ್ದರು. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣವನ್ನು ಸಿಸಿಬಿಗೆ ಹಸ್ತಾಂತರಿಸಲಾಗಿತ್ತು. ಮಂಗಳೂರು ಸಿಸಿಬಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಮಾಹಿತಿಯನ್ನು ಸಂಗ್ರಹಿಸಿ ಚಾಣಕ್ಷತನದಿಂದ ಪ್ರಕರಣವನ್ನು ಭೇದಿಸಿದ್ದಾರೆ.




