ಉಪ ಸಭಾಪತಿ ಮೇಲೆ ಕಾಗದ ಹರಿದು ಬಿಸಾಕಿದ ಬಿಜೆಪಿ ಶಾಸಕರು: ವಿಧಾನಸಭಾ ಅಧಿವೇಶನದಿಂದ 10 ಬಿಜೆಪಿ ಶಾಸಕರು ಅಮಾನತು
ಬೆಂಗಳೂರು: ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಬಿಜೆಪಿ ಶಾಸಕರು ಬಜೆಟ್ ಪ್ರತಿಗಳ ಕಾಗದಗಳನ್ನು ಹರಿದು ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದ ಘಟನೆ ನಡೆದಿದ್ದು, ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ.
ಆರ್.ಅಶೋಕ್, ಆರಗ ಜ್ಞಾನೇಂದ್ರ, ವಿ.ಸುನಿಲ್ ಕುಮಾರ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಡಾ. ಅಶ್ವತ್ಥ ನಾರಾಯಣ, ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ,ವೇದವ್ಯಾಸ ಕಾಮತ್ ಅವರು ಸೇರಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗಿಳಿದು ಧರಣಿ ನಡೆಸಿದ್ದು, ಸ್ಪೀಕರ್ ಭೋಜನ ವಿರಾಮ ರದ್ದುಪಡಿಸಿ ಕಲಾಪ ಮುಂದುವರಿಸಿದರು.
ಇನ್ನು ಬಜೆಟ್ ಮೇಲಿನ ಚರ್ಚೆ ಮುಂದುವರಿಸಲಾಗಿದ್ದು, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡುತ್ತಿದ್ದರು. ರಾಜಯಃ ಸರಕಾರದ ಐದು ಗ್ಯಾರಂಟಿ ಮತ್ತು ಇತರ ಯೋಜನೆಗಳನ್ನು ಹೊಗಳುತ್ತಿದ್ದರು. ಈ ವೇಳೆ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಧರಣಿ ಮುಂದುವರಿಸಿದ್ದಾರೆ.
ಉಪಸಭಾಧ್ಯಕ್ಷರು ಸ್ಪೀಕರ್ ಪೀಠದಲ್ಲಿ ಕುಳಿತಿದ್ದರು. ಬಿಜೆಪಿ ಶಾಸಕರು ಬಜೆಟ್ ಪ್ರತಿಗಳನ್ನ ಹರಿದು ಚೂರು ಮಾಡಿ ಎಸೆದಿದ್ದಾರೆ. ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಆಕ್ರೋಶ ಹೊರ ಹಾಕಿದ್ದು, ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ ಮತದಾರರಿಗೆ ಈ ರೀತಿ ವರ್ತನೆ ತೋರಿ ಅವಮಾನ ಮಾಡಬೇಡಿ ಎಂದಿದ್ದಾರೆ.




