March 26, 2026

ಉಪ್ಪಿನಂಗಡಿ: ಬ್ರಹ್ಮಕಲಶೋತ್ಸದ ವೇಳೆ ದೇವರಿಗೆ ಸಮರ್ಪಿಸಲಾದ ಆಭರಣಗಳು ಕಳವು ಪ್ರಕರಣ, ಅಡವಿಟ್ಟಿದ್ದ ದೇವಸ್ಥಾನದ ಮಾಜಿ ಅಧ್ಯಕ್ಷ

0
image_editor_output_image-280820738-1697605853099.jpg

ಉಪ್ಪಿನಂಗಡಿ: ಬ್ರಹ್ಮಕಲಶೋತ್ಸದ ವೇಳೆ ದೇವರಿಗೆ ಸಮರ್ಪಿಸಲಾದ ಆಭರಣಗಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ ಬೆನ್ನಿಗೆಯೇ ದೇವಳದ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷನೋರ್ವ ನಾಪತ್ತೆಯಾದ ಚಿನ್ನಾಭರಣದೊಂದಿಗೆ ಪೊಲೀಸರಿಗೆ ಶರಣಾಗಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಕಳೆದ ಡಿಸೆಂಬರ್‌ನಲ್ಲಿ ಪೆರ್ನೆಯ ಕಳೆಂಜ- ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿತ್ತು.

ಈ ಸಂದರ್ಭ ಭಕ್ತರೋರ್ವರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಮಾಲೆಯನ್ನು ಸಮರ್ಪಿಸಿದ್ದರು.

ಜೊತೆಗೆ ಈ ಹಿಂದಿನ ದೇವಾಲಯದ ಪುನರ್ ನಿರ್ಮಾತೃ ದಿ. ರಾಮದಾಸ್ ರೈ ಎಂಬವರು ಸಮರ್ಪಿಸಿದ ಎರಡು ಪವನಿನ ಚಿನ್ನದ ಸರ ದೇವಾಲಯದಲ್ಲಿತ್ತು.

ಕಳೆದ ರವಿವಾರದಂದು ಆಡಳಿತಾಧಿಕಾರಿಯ ಸಮ್ಮುಖದಲ್ಲಿ ಆಭರಣಗಳು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ಈ ಬಗ್ಗೆ ದೇವಾಲಯದ ಆಡಳಿತ ಮಂಡಳಿಯ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.

ಆಭರಣ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಶಂಕಿತರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಂತೆಯೇ, ಮಂಗಳವಾರ ತನ್ನ ಅಧ್ಯಕ್ಷೀಯ ಸ್ಥಾನದ ದುರುಪಯೋಗ ನಡೆಸಿ ದೇವಳದ ಚಿನ್ನಾಭರಣವನ್ನು ಉಪ್ಪಿನಂಗಡಿಯ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಅಡಮಾನವಿರಿಸಿ ಹಣ ಪಡೆದಿದ್ದ ಮಾಜಿ ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟು ಚಿನ್ನಾಭರಣವನ್ನು ಹಣಕಾಸು ಸಂಸ್ಥೆಯಿಂದ ಬಿಡಿಸಿಕೊಂಡು ನೇರವಾಗಿ ಪೊಲೀಸ್ ಠಾಣೆಗೆ ಹಾಜರಾಗಿದ್ದರು.

Leave a Reply

Your email address will not be published. Required fields are marked *

error: Content is protected !!