ಶಿವಮೊಗ್ಗ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತನ ಕಾರು ಜಖಂ: ಮೂವರು ಆರೋಪಿಗಳ ಬಂಧನ
ಶಿವಮೊಗ್ಗ: ಭದ್ರಾವತಿಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಗೋಕುಲ್ ಕೃಷ್ಣನ್ ಅವರ ಮೇಲೆ ಹಲ್ಲೆ ಹಾಗೂ ಕಾರು ಜಖಂಗೊಳಿಸಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಗಣೇಶ್ (22), ಹರ್ಷ (23) ಮತ್ತು ನಂಜೇಗೌಡ (22) ಎಂದು ಗುರುತಿಸಲಾಗಿದೆ.
ಆರೋಪಿಗಳು ವಿಶ್ವೇಶ್ವರ ನಗರದಲ್ಲಿ ಗೋಕುಲ್ ಕೃಷ್ಣನ್ ಅವರ ಕಾರನ್ನು ಜಖಂಗೊಳಿಸಿದ್ದರು. ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ದೃಶ್ಯಾವಳಿಗಳನ್ನು ಪರಿಶೀಲಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಾರು ಜಖಂಗೊಳಿಸಿದ ಪ್ರಕರಣ ಮಾಸುವ ಮುನ್ನವೇ ಕಿಡಿಗೇಡಿಗಳು ಹೋಟೆಲ್ಗೆ ತೆರಳಿದ್ದ ಅವರ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.
ಹಲ್ಲೆಗೊಳಗಾದ ಗೋಕುಲ್ ಕೃಷ್ಣನ್ ಅವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಗೆ ಶಾಸಕ ಚನ್ನಬಸಪ್ಪ ಸೇರಿದಂತೆ ಬಿಜೆಪಿ ಮುಖಂಡರು ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.




