ಚಿಕ್ಕಮಗಳೂರು: ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣು ಕುಸಿತ: ಓರ್ವ ಕಾರ್ಮಿಕ ಮೃತ್ಯು
ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದು ಓರ್ವ ಕಾರ್ಮಿಕ ಮೃತಪಟ್ಟಿರುವ ಘಟನೆ ನಡೆದಿದೆ.
ಜಿಲ್ಲೆಯ ಶೃಂಗೇರಿ ತಾಲೂಕು ನೆಮ್ಮಾರ್ ಬಳಿ ಘಟನೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವೇಳೆ ಜೆಸಿಬಿಯಿಂದ ಮಣ್ಣು ತಗೆಯಲಾಗುತ್ತಿತ್ತು. ಈ ವೇಳೆ ಇದ್ದಕ್ಕಿದ್ದ ಹಾಗೆ ಮಣ್ಣು ಕುಸಿದು ಕೆಳ ಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ.
ಓರ್ವ ಕಾರ್ಮಿಕ ಮುಜೀಬುರ್ (30) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾನೆ.
ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಶೃಂಗೇರಿ ಪೊಲೀಸ್ ಠಾಣೆ ಪೊಲೀಸರು ದೌಡಾಯಿಸಿ ಮಣ್ಣಿನಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.




