ಶಾಲಾ ಬಸ್, ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ: ನಾಲ್ವರು ವಿದ್ಯಾರ್ಥಿಗಳು ಸಾವು
ಬಾಗಲಕೋಟೆ: ಶಾಲಾ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ನಡೆದಿದೆ.
ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ (13), ಬಸವರಾಜ (17) ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಗಳು ಕವಟಗಿ ಗ್ರಾಮದ ಮೂಲದವರಾಗಿದ್ದು, ಅಲಗೂರು ಗ್ರಾಮದ ಬಳಿ ಇರುವ ಶ್ರೀ ವರ್ಧಮಾನ ಮಹಾವೀರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದಾರೆ. ಶ್ರೀ ವರ್ಧಮಾನ ಮಹಾವೀರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯಲ್ಲಿ ನಿನ್ನೆ ವಾರ್ಷಿಕೋತ್ಸವ ನಡೆದಿದ್ದು, ವಿದ್ಯಾರ್ಥಿಗಳು ವಾರ್ಷಿಕೋತ್ಸವ ಸಂಭ್ರಮ ಮುಗಿಸಿ ರಾತ್ರಿ ವೇಳೆ ಶಾಲಾ ಬಸ್ಸಿನಲ್ಲಿ ಮನೆಗೆ ತೆರಳುತ್ತಿದ್ದರು. ಮಧ್ಯರಾತ್ರಿ 12 ಗಂಟೆಗೆ ವೇಳೆಗೆ ಅಲಗೂರು ಗ್ರಾಮದ ಬಳಿ ಶಾಲಾ ಬಸ್ ಹಾಗೂ ಹಾಗೂ ಟ್ರ್ಯಾಕ್ಟರ್ ಢಿಕ್ಕಿಯಾಗಿದೆ. ಘಟನೆ ಭೀಕರತೆಗೆ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟಕ್ಕೂ ಅಧಿಕ ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತ ವಿದ್ಯಾರ್ಥಿಗಳ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತರ ಪೈಕಿ ಇಬ್ಬರು ಪಿಯುಸಿ, ಇನ್ನಿಬ್ಬರು 9ನೇ ತರಗತಿಯಲ್ಲಿ ಓದುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಗಲಕೋಟೆ ಎಸ್.ಪಿ. ಅಮರನಾಥ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.




