ಫೆ. 17 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ವಿಶ್ವ ಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬ ಘೋಷವಾಕ್ಯ ಇಡೀ ರಾಜ್ಯದ ತುಂಬ ಮೊಳಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕರಾದ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣ ಮಾಡಿ ಮಾತನಾಡಿದರು.
ಫೆ. 17 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ತಾಲ್ಲೂಕು ಮಟ್ಟದಲ್ಲಿ ಶಾಸಕರು ಹಾಗೂ ಎಲ್ಲಾ ನಗರ ಹಾಗೂ ಗ್ರಾಮೀಣ ಸಂಸ್ಥೆಗಳಲ್ಲಿ ಆಯಾ ಅಧ್ಯಕ್ಷರಿಂದ ನೆರವೇರಿಸಲು ಸೂಚಿಸಲಾಗಿದೆ. ಎಲ್ಲ ಕಚೇರಿಗಳಲ್ಲಿಯೂ ಬಸವಣ್ಣನವರ ಭಾವಚಿತ್ರವಿರಬೇಕು, ಅವರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಸ್ವಲ್ಪವಾದರೂ ಅಳವಡಿಸಿಕೊಳ್ಳಬೇಕು ಎಂದರು.
ಬಸವ ಜಯಂತಿ ಆಚರಿಸಿ, ಹಣೆಬರಹ, ನನ್ನ ಕರ್ಮ ಎನ್ನುವುದು ಪುನ: ದಾರಿ ತಪ್ಪಿಸಿದಂತಾಗುತ್ತದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ದ್ವೇಷಿಸುವುದು ದುರ್ಗುಣ. ಬಸವಣ್ಣ ಸಾಂಸ್ಕøತಿಕ ನಾಯಕ ಎನ್ನುವುದು ಅತ್ಯಂತ ಯೋಗ್ಯವಾಗಿದೆ ಎಂದರು.




