ಎಪ್ರಿಲ್ 1ರಿಂದ BPL, APL ಕಾರ್ಡ್ ವಿತರಣೆ: ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ
ಬೆಂಗಳೂರು: ರಾಜ್ಯಾದ್ಯಂತ ಪಡಿತರ ಚೀಟಿಗೆ ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1ರಿಂದ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಸಭೆಯ ಕಲಾಪದಲ್ಲಿಂದು ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಸದನದಲ್ಲಿ ಮಾತನಾಡಿದ ಶಾಸಕಿ ನಯನ ಮೋಟಮ್ಮ, ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆಯಾಗುತ್ತಿದೆ. ಹಲವರ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆ ಜೊತೆ ಲಿಂಕ್ ಆಗಿಲ್ಲ. ಇದರಿಂದ ಐದು ಕೆಜಿಯ ಅಕ್ಕಿಯ ಹಣ ಹಲವು ಫಲಾನುಭವಿಗಳಿಗೆ ಕೆಲವು ತಿಂಗಳಿಂದ ತಲುಪುತ್ತಿಲ್ಲ. ಈ ಹಣ ಇಂತಹ ಫಲಾನುಭವಿಗಳಿಗೆ ಕೊಡುತ್ತಿದ್ದೀರಾ? ಇಲ್ಲವೇ ಎಂದು ಪ್ರಶ್ನಿಸಿದರು.




