ರಸ್ತೆ ಅಪಘಾತ: ಚುನಾವಣಾ ಕರ್ತವ್ಯಕ್ಕೆ ತೆರಳಿದ್ದ ಪೊಲೀಸ್ ಅಧಿಕಾರಿ, ಕಾನ್ ಸ್ಟೇಬಲ್ ಮೃತ್ಯು
ಬೆಂಗಳೂರು: ಕರ್ನಾಟಕದಿಂದ ತಮಿಳುನಾಡಿಗೆ ಚುನಾವಣಾ ಕರ್ತವ್ಯಕ್ಕೆ ತೆರಳಿದ್ದ ಪೊಲೀಸ್ ಅಧಿಕಾರಿ ಹಾಗೂ ತಮಿಳುನಾಡಿನ ಕಾನ್ಸ್ಟೇಬಲ್ ಒಬ್ಬರು ಅಪಘಾತದಲ್ಲಿ ಮೃತಪಟ್ಟ ಘಟನೆ ತಮಿಳುನಾಡಿನ ಕಿಲ್ಪೆನ್ನತುರ್ ಎಂಬಲ್ಲಿ ನಡೆದಿದೆ.
ಕೆಎಸ್ಆರ್ಪಿ ಅಸಿಸ್ಟೆಂಟ್ ಕಮಾಂಡೆಂಟ್ ಪ್ರಭಾಕರ್ ಹಾಗೂ ತಮಿಳುನಾಡಿನ ಕಾನ್ಸ್ಟೇಬಲ್ ದಿನೇಶ್ ಮೃತಪಟ್ಟ ಪೊಲೀಸರು ಎಂದು ತಿಳಿದು ಬಂದಿದೆ.
ಪ್ರಭಾಕರ್ ಅವರು ಜೀಪ್ನಲ್ಲಿ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ತೆರಳುತ್ತಿದ್ದಾಗ ಬಸ್ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.




