ಮುಲ್ಕಿ: ಚಿಪ್ಪು ಹೆಕ್ಕಲು ಹೋಗಿ ಓರ್ವ ನೀರಿನಲ್ಲಿ ಮುಳುಗಿ ನಾಪತ್ತೆ
ಮುಲ್ಕಿ: ಕೊಳಚಿ ಕಂಬಳ ಬೀಚ್ ಬಳಿಯಿಂದ ಸಸಿಹಿತ್ಲು ಮುಂಡಾ ಬೀಚ್ ಬಳಿಯ ಸಮುದ್ರದ ಅಳಿವೆ ಬಾಗಿಲಿನಲ್ಲಿ ಬಜಪೆಯ ಅದ್ಯಪಾಡಿಯಿಂದ ಬಂದ ಯುವಕರ ತಂಡ ಚಿಪ್ಪು ಹೆಕ್ಕಲು ಹೋಗಿ, ಓರ್ವ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ.
ನಾಪತ್ತೆಯಾದ ಯುವಕನನ್ನು ಬಜಪೆಯ ಅದ್ಯಪಾಡಿಯ ಹಳೆ ವಿಮಾನ ನಿಲ್ದಾಣ ಬಳಿಯ ನಿವಾಸಿ ಅಭಿಲಾಶ್(24) ಎಂದು ಗುರುತಿಸಲಾಗಿದೆ.
ಬಜಪೆ ಸಮೀಪದ ಆದ್ಯಪಾಡಿಯ ಸುಮಾರು ಹತ್ತು ಮಂದಿಯ ಯುವಕರ ತಂಡ ಚಿಪ್ಪು ಮತ್ತು ಏಡಿ ಹಿಡಿಯಲು ಮುಲ್ಕಿಯ ಕೊಳಚಿ ಕಂಬಳ ಬೀಚ್ ಬಳಿಗೆ ಬಂದಿದ್ದು, ಶಾಂಭವಿ ನದಿಯಲ್ಲಿ ನೀರಿನ ಇಳಿತ ವಿದ್ದ ಕಾರಣ ಸುಮಾರು ಎರಡು ಕಿಲೋಮೀಟರ್ ನಡೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ಈ ಸಂದರ್ಭ ಸಸಿಹಿತ್ಲು ಮುಂಡಾ ಬೀಚ್ ಅಳಿವೆ ಬಾಗಿಲು ಬಳಿ ನೀರಿನ ಆಳ ಗೊತ್ತಾಗದೆ ಈಜು ಬಾರದ ಧನುಷ್ ಮತ್ತು ಜೀವನ್ ಎಂಬವರು ನೀರಿನಲ್ಲಿ ಮುಳುಗಿದ್ದು ಅವರನ್ನು ರಕ್ಷಿಸಲು ಈಜಲು ಗೊತ್ತಿದ್ದ ಅಭಿಲಾಶ್ ಮುಂದಾಗಿದ್ದು ಅವರನ್ನು ರಕ್ಷಿಸುವ ಯತ್ನದಲ್ಲಿ ಉಳಿದವರ ಕಣ್ಣೆದುರೇ ನೀರಿನ ರಭಸಕ್ಕೆ ತಾನು ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.




