ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ವೈದ್ಯಾಧಿಕಾರಿಯಿಂದ ಹಲ್ಲೆ, ಕುಸಿದು ಬಿದ್ದು ವ್ಯಕ್ತಿ ಸಾವು
ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರಿಗೆ ಪಶು ವೈದ್ಯಾಧಿಕಾರಿಯೊಬ್ಬರು ಹಲ್ಲೆ ನಡೆಸಿದ ಕಾರಣ ವ್ಯಕ್ತಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ.
ಮೃತರನ್ನು ಕೊಕ್ಕಡ ಗ್ರಾಮದ ಕೃಷ್ಣ ಯಾನೆ ಕಿಟ್ಟ (58) ಎಂದು ಗುರುತಿಸಲಾಗಿದೆ.
ಕೊಕ್ಕಡದ ಸ್ಥಳೀಯ ನಿವಾಸಿ ಮೃತ ಕೃಷ್ಣ ಅವರು ವಿಪರೀತ ಜ್ವರ ಇದ್ದ ಕಾರಣ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು.
ಆರೋಗ್ಯದಲ್ಲಿ ಚೇತರಿಕೆ ಕಂಡ ಕಾರಣ ಸೋಮವಾರ ಡಿಸ್ಚಾರ್ಜ್ ಮಾಡಿಕೊಂಡು ಬಸ್ಸಿನಲ್ಲಿ ಕೊಕ್ಕಡಕ್ಕೆ ಬಂದಿಳಿದಿದ್ದಾರೆ. ಇದೇ ವೇಳೆ ತನ್ನ ಬಹಳ ಆಪ್ತರು, ಪರಿಚಿತರೇ ಆದ ಕೊಕ್ಕಡದ ಪಶು ವೈದ್ಯರು ಕೃಷ್ಣ ಅವರಲ್ಲಿ ಮಾತನಾಡುತ್ತ ಜ್ವರ ಇದ್ದು ಇಷ್ಟು ಬೇಗ ಡಿಸ್ಚಾರ್ಜ್ ಆಗಿ ಯಾಕೆ ಬಂದೆ, ಆರೋಗ್ಯ ಸುಧಾರಿಸಿ ಬರಬೇಕಿತ್ತು ಎಂದು ಬುದ್ದಿ ಮಾತು ಹೇಳಿ ಒಂದು ಏಟು ಹೊಡೆದಿದ್ದಾರೆ ಎನ್ನಲಾಗಿದೆ.
ಪಶು ವೈದ್ಯರು ಹೊಡೆದ ರಭಸಕ್ಕೆ ಕೃಷ್ಣರವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಸ್ವಲ್ಪದರಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.




