ಬೆಳ್ತಂಗಡಿ: ಪೊಲೀಸ್ ಠಾಣೆಗೆ ಹಾಜರಾದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ದಿನವಿಡೀ ನಡೆದ ಹೈ ಡ್ರಮಾದ ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಾತ್ರಿ 9.30ರ ಸುಮಾರಿಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.
ಶಾಸಕರ ಮನೆ ಮುಂದೆ ದಿನವಿಡೀ ಪೊಲೀಸರು ಕಾದರೂ ಕಾರ್ಯಕರ್ತರು ಶಾಸಕರನ್ನು ವಶಕ್ಕೆ ಪಡೆಯಲು ಅವಕಾಶ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ ಪೊಲೀಸರು ತಕ್ಷಣ ಠಾಣೆಗೆ ಹಾಜರಾಗುವಂತೆ ನೋಟೀಸ್ ನೀಡಿ ಹಿಂತಿರುಗಿದ್ದರು. ಇದೀಗ 9.30ರ ಸುಮಾರಿಗೆ ಶಾಸಕ ಹರೀಶ್ ಪೂಂಜ ಅವರು ಸ್ವತಃ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ಶರಣಾಗಿದ್ದಾರೆ.
ವಿಧಾನಸಭಾ ಶಾಸಕ ಹರೀಶ್ ಪೂಂಜರ ವಿರುದ್ಧ, ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ, ಹರೀಶ್ ಪೂಂಜರನ್ನು, ವಿಚಾರಣೆಗಾಗಿ ಠಾಣೆಗೆ ಕರೆತರಲು, ಬೆಳ್ತಂಗಡಿ ಠಾಣಾ ಪೊಲೀಸರು ಸದ್ರಿಯವರ ಮನೆಗೆ ತೆರಳಿರುತ್ತಾರೆ.
ಈ ವೇಳೆ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ನಳೀನ್ ಕುಮಾರ್ ಕಟೀಲ್ ರವರು, ತಾನೇ ಖುದ್ದಾಗಿ ಹರೀಶ್ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ವಿನಂತಿಸಿಕೊಂಡಿರುತ್ತಾರೆ.
ಪ್ರಸ್ತುತ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಂಜಾರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಮಾಧ್ಯಮಕ್ಕೆ ಮಾಹಿತಿ ನೀಡಿದೆ.




