ಮರದಲ್ಲಿ ಮಾವಿನ ಕಾಯಿ ಕೀಳುವಾಗ ವಿದ್ಯುತ್ ಸ್ಪರ್ಶ: 9ನೇ ತರಗತಿಯ ವಿದ್ಯಾರ್ಥಿ ಮೃತ್ಯು
ಹೊಸಕೋಟೆ: ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಪಕ್ಕದಲ್ಲಿರುವ ಡಾ.ಬಿ. ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸೂಲಿಬೆಲೆ ಹೋಬಳಿಯ ತಿಮ್ಮಪ್ಪನಹಳ್ಳಿ ಗ್ರಾಮದ ನಿವಾಸಿ ಸಾಯಿಭವನ್ (13) ಮೃತ ಬಾಲಕ.
ಮೃತ ಸಾಯಿಭವನ್ ನಗರದ ಬಾಲಕರ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡಿಕೊಂಡು ವಸತಿ ನಿಲಯದಲ್ಲಿ ವಾಸವಾಗಿದ್ದ. ಶನಿವಾರ ಸಂಜೆ ಬಟ್ಟೆ ಒಗೆದು ಮಹಡಿಯ ಮೇಲೆ ಒಣಗಿ ಹಾಕಿದ್ದ.
ಭಾನುವಾರ ಬೆಳಗಿನ ಜಾವ 6 ಗಂಟೆಯಲ್ಲೇ ತನ್ನ ತಮ್ಮನಾದ ಸಾಯಿಕುಶಾಲ್ನನ್ನು ಕರೆದುಕೊಂಡು ಮಹಡಿಯ ಮೇಲೆ ಹೋಗಿ ಒಣಗಲು ಹಾಕಿದ್ದ ಬಟ್ಟೆಯನ್ನು ತೆಗೆದುಕೊಂಡು ನಂತರ ಪಕ್ಕದಲ್ಲೇ ಇದ್ದ ಮಾವಿನ ಮರದಲ್ಲಿ ಮಾವಿನ ಕಾಯಿ ಕೀಳಲು ಮಹಡಿಯ ಮೇಲೆ ಇದ್ದ ಕಬ್ಬಿಣದ ಸಲಾಕೆಯನ್ನು ತೆಗೆದುಕೊಂಡು ಹೋದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ.




