ಚಾರ್ಮಾಡಿ ಘಾಟಿಯ ತಡೆಗೋಡೆಯಲ್ಲಿ ಅಲ್ಲಲ್ಲಿ ಬಿರುಕು: ಆತಂಕದಲ್ಲಿ ಸಂಚರಿಸುತ್ತಿರುವ ಪ್ರಯಾಣಿಕರು
ಮಂಗಳೂರು: ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟಿಯ ತಡೆಗೋಡೆಯಲ್ಲಿ ಅಲ್ಲಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಪ್ರಮುಖ ಹೆದ್ದಾರಿಯಲ್ಲಿ ಸಂಚಾರವೇ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ.
ಇದು ಬೆಂಗಳೂರು ಮತ್ತು ಮಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಗಳಲ್ಲಿ ಒಂದಾಗಿದ್ದು, ಸಂಚಾರ ಸ್ಥಗಿತಗೊಂಡರೆ ಕರಾವಳಿ ಜನರಿಗೆ ಬಹಳಷ್ಟು ಸಮಸ್ಯೆಯಾಗಲಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ವ್ಯಾಪ್ತಿಯ ಚಾರ್ಮಾಡಿ ಘಾಟಿಯಲ್ಲಿ ಕಳೆದ 15 ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿಐದಾರು ಕಡೆ ಭೂಮಿ ಬಾಯ್ದಿಟ್ಟಿದ್ದು, ರಸ್ತೆಯ ತಡೆಗೋಡೆ ಅಲ್ಲಲ್ಲಿ
ಬಿರುಕು ಬಿಟ್ಟಿದೆ. ಈ ಮಾರ್ಗದಲ್ಲಿ ನಿತ್ಯ ಹತ್ತಾರು ಅಂಬ್ಯುಲೆನ್ಸ್ಗಳು ರೋಗಿಗಳನ್ನು ಉಡುಪಿ ಹಾಗೂ ಮಂಗಳೂರಿಗೆ ಕರೆದೊಯ್ಯುತ್ತವೆ. ಹಣ್ಣು-ತರಕಾರಿಗಳ ಗಾಡಿಗಳು, ಕಾಲೇಜು ಮಕ್ಕಳು ಕೂಡ ಈ ಮಾರ್ಗವನ್ನೇ ಆಶ್ರಯಿಸಿದ್ದಾರೆ. ಆದರೆ ವರ್ಷದಿಂದ ವರ್ಷಕ್ಕೆ ಚಾರ್ಮಾಡಿ ತನ್ನ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ.




