ಹಣಕ್ಕಾಗಿ ಸ್ಪಾ ಮಾಲಕರಿಗೆ ಬ್ಲ್ಯಾಕ್ ಮೇಲ್: ಸುದ್ದಿವಾಹಿನಿಯ ನಿರೂಪಕಿಯ ಬಂಧನ
ಬೆಂಗಳೂರು: ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರು. ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ‘ರಾಜ್ ನ್ಯೂಸ್’ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜಿ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ.
ಸುದ್ದಿವಾಹಿನಿಯ ಸಿಇಒ ರಾಜಾನುಕುಂಟೆ ವೆಂಕಟೇಶ್ ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್ ಬಂಧಿತರಾಗಿದ್ದು, ಆರೋಪಿಗಳಿಂದ 3 ಮೊಬೈಲ್ ಜಪ್ತಿ ಮಾಡಲಾಗಿದೆ.
ಕೃತ್ಯ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿರುವ ನಿರೂಪಕಿ ದಿವ್ಯಾ, ಸಚಿನ್ ಹಾಗೂ ಆಕಾಶ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇತ್ತೀಚೆಗೆ ಇಂದಿರಾನಗರದ 100 ಅಡಿ ರಸ್ತೆ 15ನೇ ಮುಖ್ಯರಸ್ತೆಯ ‘ಟ್ರಿ ಸ್ಟ್ರಾ ಅಂಡ್ ಬ್ಯೂಟಿ’ ಪಾರ್ಲ್ರನ ವ್ಯವಸ್ಥಾಪಕ ಶಿವಶಂಕ ಅವರಿಗೆ ವೇಶ್ಯಾವಾಟಿಕೆ ನಡೆದಿದೆ ಎಂದು ಬೆದರಿಸಿ ಹಣ ಸುಲಿಗೆ ಮಾಡಲು ವೆಂಕಟೇಶ್ ತಂಡ ಯತ್ನಿಸಿತ್ತು.
ಈ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಸಿಇಒ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.




