ದ.ಕ. ಜಿಲ್ಲೆಯ ಯಾವುದೇ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ
ಮಂಗಳೂರು: ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತಗೊಳಿಸುವ ಭಾಗವಾಗಿ ದ.ಕ. ಜಿಲ್ಲೆಯ ಯಾವುದೇ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ. 2011ರಲ್ಲಿ ಬೆಂಗಳೂರು ನಗರ ಜಿಲ್ಲೆ ಮತ್ತು 2024 ರಲ್ಲಿ ಮಾರ್ಚ್ನಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಇದು ಆ ಜಿಲ್ಲೆಯಲ್ಲಿ ಯಶಸ್ವಿಯಾಗುತ್ತಿರುವ ಕಾರಣ ರಾಜ್ಯಾದ್ಯಂತ ಇದನ್ನು ವಿಸ್ತರಿಸಲಾಗಿದೆ. ಅದರಂತೆ ಜಿಲ್ಲೆಯ ಉಪನೋಂದಣಿ ಕಚೇರಿಯಲ್ಲೂ ನೋಂದಣಿಗ ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು, ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು.
ಮಂಗಳೂರು ನಗರದ ಆಸ್ತಿಯನ್ನು ಮಾರಾಟ ಅಥವಾ ಖರೀದಿ ಮಾಡಲು ಮಂಗಳೂರು ತಾಲೂಕು, ಮುಲ್ಕಿ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ವಿಟ್ಲ ಸುಳ್ಯ ಮೂಡುಬಿದಿರೆ ಉಪನೋಂದಣಿ ಕಚೇರಿಗಳ ಪೈಕಿ ಯಾವುದೇ ಕಚೇರಿಗಳಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳಬಹುದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.