ಹಿಜಾಬ್ ಹಾಕಿದ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಹೊರಗಟ್ಟಿ ಗೇಟ್ ಹಾಕಿದ್ದ ಪ್ರಾಚಾರ್ಯರಿಗೆ ರಾಜ್ಯ ಪ್ರಶಸ್ತಿ
ಬೆಂಗಳೂರು : ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ 2023-2024ನೇ ಸಾಲಿನ ರಾಜ್ಯಮಟ್ಟದ ಪ್ರಾಚಾರ್ಯ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿಯ ಪ್ರಶಸ್ತಿಗೆ ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಬಿ.ಜಿ. ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಹಿಜಾಬ್ ಪ್ರಕರಣದ ವೇಳೆ ವಿವಾದಕ್ಕೀಡಾಗಿದ್ದ ಪ್ರಾಂಶುಪಾಲರಿಗೆ ಪ್ರಶಸ್ತಿ ಪ್ರಕಟಿಸಿರುವ ಕಾಂಗ್ರೆಸ್ ಸರಕಾರದ ಈ ಆಯ್ಕೆ ವಿವಾದ ಸೃಷ್ಟಿಸಿದೆ.
ಪ್ರಾಂಶುಪಾಲ ಬಿ.ಜಿ ರಾಮಕೃಷ್ಣ ಈ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಜಾಬ್ ವಿವಾದ ತಲೆದೋರಿದಾಗ ವಿವಾದಕ್ಕೀಡಾಗಿದ್ದರು. ಕುಂದಾಪುರದ ಸರ್ಕಾರಿ ಜೂನಿಯರ್ ಕಾಲೇಜಿಗೆ ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಗೇಟ್ ನಲ್ಲಿಯೇ ತಡೆದು ಪ್ರವೇಶ ನಿರಾಕರಿಸಿದ್ದರು. ವಿದ್ಯಾರ್ಥಿನಿಯರನ್ನು ಗೇಟ್ನಿಂದ ಹೊರಗೆ ಕಳುಹಿಸಿ ಸ್ವತಃ ತಮ್ಮ ಕೈಯಾರೆ ಕಾಲೇಜು ಗೇಟ್ ಬಂದ್ ಮಾಡಿದ್ದರು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು.
– Advertisement –
ಕಾಲೇಜಿಗೆ ಪ್ರವೇಶ ನೀಡುವಂತೆ ಹಿಜಾಬ್ ವಿದ್ಯಾರ್ಥಿನಿಯರು ಪರಿಪರಿಯಾಗಿ ಬೇಡಿಕೊಂಡು ಕಣ್ಣೀರು ಹಾಕಿದ್ದರು. ಪರೀಕ್ಷೆ ಎರಡು ತಿಂಗಳು ಇರುವಾಗ ಏಕಾಏಕಿ ಹಿಜಾಬ್ ಧರಿಸುವಂತಿಲ್ಲ ಎಂಬ ನಿಯಮ ಜಾರಿಗೊಳಿಸುವುದು ಸರಿಯಲ್ಲ. ನಮಗೆ ಶಿಕ್ಷಣವೂ ಬೇಕು, ಹಿಜಾಬ್ ಧರಿಸಲು ಅವಕಾಶವನ್ನೂ ನೀಡಬೇಕು ಎಂದು ಆಗ್ರಹಿಸಿದರೂ ವಿದ್ಯಾರ್ಥಿನಿಯರ ಬೇಡಿಕೆಗೆ ಪ್ರಾಂಶುಪಾಲರು ಕಿವಿಗೊಡದೆ ಕಾಲೇಜು ಗೇಟ್ ಹಾಕಿದ್ದರು.
ಅವರ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ಸರಕಾರವನ್ನು ಮೆಚ್ಚಿಸಲು ಪ್ರಾಂಶುಪಾಲರು ಗೇಟ್ಕೀಪರ್ ಕೆಲಸವನ್ನೂ ಮಾಡಿದ್ದಾರೆ ಎಂಬ ಟೀಕೆ ಎದುರಾಗಿತ್ತು.
ಪ್ರಾಂಶುಪಾಲರಾಗಿ ರಾಮಕೃಷ್ಣ ಬಿ.ಜಿ ತೆಗೆದುಕೊಂಡ ಕ್ರಮದಿಂದ ಕೆಲ ವಿದ್ಯಾರ್ಥಿನಿಯರು ಶಿಕ್ಷಣವನ್ನು ತೊರೆದು ಮನೆಯಲ್ಲಿಯೇ ಇರುವ ಪರಿಸ್ಥಿತಿ ತಂದೊಡ್ಡಿದೆ ಎಂಬ ಆರೋಪ ಕೂಡ ಇದೆ. ಅದೇ ಪ್ರಾಂಶುಪಾಲರಿಗೆ ಕಾಂಗ್ರೆಸ್ ಸರಕಾರ ರಾಜ್ಯ ಪ್ರಶಸ್ತಿ ಪ್ರಕಟಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.
“ಕಾಂಗ್ರೆಸ್ ಸರ್ಕಾರ ಬಂದರೆ ಅಲ್ಪಸಂಖ್ಯಾತರಿಗೆ ರಕ್ಷಣೆ, ಹಿಜಾಬ್ ಗೆ ಅವಕಾಶ ಎಂದು ಹೇಳಿದವರು ಈಗ ಯಾಕೆ ಹಿಜಾಬ್ ವಿರೋಧಿ ಪ್ರಾಂಶುಪಾಲರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದಾರೆ” ಎಂಬ ಆಕ್ರೋಶದ ಮಾತುಗಳು ಕೇಳಿಬಂದಿವೆ.





