ಮಸೀದಿಯೊಳಗೆ ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ: ಹೈಕೋರ್ಟ್
ಬೆಂಗಳೂರು: ಮಸೀದಿಯೊಳಗೆ ಜೈ ಶ್ರೀರಾಮ್ ಘೋಷಣೆ ಕೂಗಿದ ಕೂಡಲೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೈಕೋರ್ಟ್ ಮಂಗಳವಾರ ಹೇಳಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳ ವಿರುದ್ಧ ಧಾರ್ಮಿಕ ನಂಬಿಕೆಗಳ ಧಕ್ಕೆ ತಂದ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್, ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ ಐಆರ್ ಹಾಗೂ ಸಳೀಯ ಜೆಎಂಎಫ್ಸಿ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶಿಸಿದೆ.
ಕಡಬ ತಾಲೂಕು ಐತ್ತೂರು ಗ್ರಾಮದ ಮರ್ಧಾಳ ಎಂಬಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿಯ ಆವರಣಕ್ಕೆ 2024ರ ಸೆಪ್ಟೆಂಬರ್ 24ರಂದು ರಾತ್ರಿ ಸುಮಾರು 10.50ರ ಸಮಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಜೈ ಶ್ರೀರಾಮ್ ಘೋಷಣೆ ಕೂಗಿದ ಮತ್ತು ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ ಆರೋಪ ಅರ್ಜಿದಾರರ ಮೇಲಿದೆ.




