ಕಾಂಗ್ರೆಸ್ ಮುಖಂಡ, ಮಾಜಿ ಸಚಿವರ ಹನಿಟ್ರ್ಯಾಪ್: ನಲಪಾಡ್ ಬ್ರಿಗೇಡ್ನ ಕಲಬುರಗಿ ಘಟಕದ ಅಧ್ಯಕ್ಷೆಯ ಬಂಧನ
ಬೆಂಗಳೂರು: ಮೊಬೈಲ್ ಹಾಗೂ ವಿಡಿಯೊ ಕರೆಗಳನ್ನು ರೆಕಾರ್ಡ್ ಮಾಡಿಕೊಂಡು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರಿಂದ ಹಣ ಸುಲಿಗೆಗೆ ಪ್ರಯತ್ನಿಸಿದ್ದ ಪ್ರಕರಣದಲ್ಲಿ ನಲಪಾಡ್ ಬ್ರಿಗೇಡ್ನ ಕಲಬುರಗಿ ಘಟಕದ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್ ಪಾಟೀಲ ಬಂಧಿತರು. ಆರೋಪಿಗಳು ಕಲಬುರಗಿಯ ಆಳಂದ ರಸ್ತೆಯ ವಿಜಯನಗರ ಕಾಲೊನಿ ನಿವಾಸಿಗಳು.
ಪ್ರಕರಣದ ಸಂಬಂಧ ಮಾಲೀಕಯ್ಯ ಗುತ್ತೇದಾರ್ ಅವರ ಪುತ್ರ ರಿತೇಶ್ ಗುತ್ತೇದಾರ್ ಅವರು ಶುಕ್ರವಾರ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಶನಿವಾರವೇ ನಗರದ ಗರುಡಾ ಮಾಲ್ ಬಳಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
‘ಬಂಧಿತರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗಳನ್ನು ಎಂಟು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಆರೋಪಿಗಳನ್ನು ವಿಚಾರಣೆ ನಡೆಸಿ ಇನ್ನಷ್ಟು ಮಾಹಿತಿ ಕಲೆ ಹಾಕಲಾಗುವುದು’ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
‘ಅಕ್ಟೋಬರ್ 21ರಂದು ರಿತೇಶ್ ಅವರಿಗೆ ಕರೆ ಮಾಡಿದ್ದ ಆರೋಪಿ ಮಂಜುಳಾ, ತಾನು ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಎಂದು ಪರಿಚಯಿಸಿಕೊಂಡಿದ್ದರು. ಮಾಲೀಕಯ್ಯ ಗುತ್ತೇದಾರ್ ಅವರು ತನಗೆ ನಿಂದನೆಯ ಸಂದೇಶ ಕಳುಹಿಸುತ್ತಿದ್ದಾರೆ. ಈ ಸಂಬಂಧ ತಮ್ಮೊಂದಿಗೆ ಚರ್ಚಿಸಬೇಕೆಂದು ಕೇಳಿಕೊಂಡಿದ್ದರು. ನಂತರ, ಕೊಡಿಗೇಹಳ್ಳಿಯ ಸ್ವಾತಿ ಗಾರ್ಡೆನಿಯಾ ಹೋಟೆಲ್ನಲ್ಲಿ ರಿತೇಶ್ ಅವರನ್ನು ಆರೋಪಿಗಳು ಭೇಟಿ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.




