ಬಾಲಕೃಷ್ಣ ಕೊಲೆಗೆ ಆರ್ಸೆನಿಕ್ ಟ್ರೈ ಆಕ್ಸೈಡ್ ವಿಷ ಬಳಕೆ
ಅಜೆಕಾರು: ಬಾಲಕೃಷ್ಣ ಕೊಲೆಗೆ ಸಂಬಂಧಿಸಿದಂತೆ ಕೊಲೆ ಆರೋಪಿ ಪ್ರತಿಮ ಅಹಾರದಲ್ಲಿ ಸೇರಿಸಿದ್ದ ವಿಷ ಪದಾರ್ಥವು ಆರ್ಸೆನಿಕ್ ಟ್ರೈ ಆಕ್ಸೈಡ್ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಆರ್ಸೆನಿಕ್ ಟ್ರೈ ಆಕ್ಸೈಡ್ ವಿಷ ಪದಾರ್ಥವನ್ನು ಪ್ರಿಯಕರ ದಿಲೀಪ್ ಹೆಗ್ಡೆ ಉಡುಪಿಯ ಲ್ಯಾಬ್ ಒಂದರಿಂದ ಪಡೆದಿದ್ದ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಅಜೆಕಾರು ಪೊಲೀಸರು ಲ್ಯಾಬ್ ಮಾಲಕರನ್ನು ಹಾಗೂ ಅವರ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ. ಅದರ ಜತೆ ಆರೋಪಿ ಪ್ರತಿಮಾಳಿಂದ 2 ಮೊಬೈಲ್ ಹಾಗೂ ಮತ್ತೊಬ್ಬ ಆರೋಪಿ ದಿಲೀಪ್ ಹೆಗ್ಡೆಯಿಂದ 1 ಮೊಬೈಲ್ ಮತ್ತು 2 ಸಿಮ್ ಸೇರಿದಂತೆ ಒಟ್ಟು 4 ಮೊಬೈಲ್ಗಳನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಯಲ್ಲಿ ತೊಡಗಿಕೊಂಡಿದ್ದಾರೆ.
ಆರೋಪಿ ದಿಲೀಪ್ ಉಡುಪಿಯ ಲ್ಯಾಬ್ನಿಂದ ಆರ್ಸೆನಿಕ್ ಟ್ರೈ ಆಕ್ಸೈಡ್ ತರಿಸಿ ಬಾಲಕೃಷ್ಣ ಅವರ ಪತ್ನಿ ಪ್ರತಿಮಾಳಿಗೆ ನೀಡಿದ್ದ. ಪ್ರತಿಮಾ ನಿತ್ಯ ಆಹಾರದ ಜತೆ ಸ್ವಲ್ಪ ಸ್ವಲ್ಪವೇ ಪತಿಗೆ ನೀಡುತ್ತಿದ್ದಳು. ಇದರಿಂದಾಗಿ ಬಾಲಕೃಷ್ಣ ಅವರ ಅಂಗಾಂಗಗಳು ಸಂವೇದನೆ ಕಳೆದುಕೊಂಡು ಆಸ್ಪತ್ರೆ ಸೇರುವಂತಾಯಿತು. ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದ ಬಾಲಕೃಷ್ಣ ಅವರನ್ನು ಅ. 19ರ ರಾತ್ರಿ ಮನೆಗೆ ಕರೆತರಲಾಗಿತ್ತು. ಆರೋಪಿಗಳಾದ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿಕೊಂಡು ಅದೇ ದಿನ ಮಧ್ಯರಾತ್ರಿ ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು.




