ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಸಾವು: ಎರಡು ಬಾರಿ ಸಿಜೇರಿಯನ್ ಮಾಡಿದ್ದ ವೈದ್ಯರು
ಬೆಳಗಾವಿ: ಜಿಲ್ಲೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಮೃತರನ್ನು ಕಳೆದುಕೊಂಡ ನೋವಿನಿಂದ ರೊಚ್ಚಿಗೆದ್ದ ಕುಟುಂಬಸ್ಥರು ಮಂಗಳವಾರ ಬಿಮ್ಸ್ ಆಸ್ಪತ್ರೆ ಎದುರು ದಿಢೀರ್ ಪ್ರತಿಭಟನೆ ನಡೆಸಿ, ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಮದುರ್ಗ ತಾಲೂಕಿನ ನಾಗನೂರ ತಾಂಡಾದ ಬಾಣಂತಿ ಕಲ್ಪನಾ ಅನಿಲ ಲಮಾಣಿ (26) ಮೃತಪಟ್ಟವರು.
ಮಂಗಳವಾರ ಮಧ್ಯರಾತ್ರಿ 2.30ರ ಸುಮಾರಿಗೆ ಶಸ್ತ್ರಚಿಕಿತ್ಸೆ ಮೂಲಕ ಗಂಡು ಮಗುವಿಗೆ ಕಲ್ಪನಾ ಜನ್ಮ ನೀಡಿದ್ದರು. ಈ ವೇಳೆ ಮಗು ಮತ್ತು ತಾಯಿ ಆರೋಗ್ಯ ಇರುವುದಾಗಿ ವೈದ್ಯರು ಹೇಳಿದ್ದರಂತೆ. ಬೆಳಗ್ಗೆ 8.30ರವರೆಗೂ ಆರೋಗ್ಯವಾಗಿದ್ದ ಕಲ್ಪನಾ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿ ಸಾವುನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
“ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಸಾವಾಗಿದೆ. ಎರಡು ಬಾರಿ ಸಿಜೇರಿಯನ್ ಮಾಡಿದ್ದಾರೆ” ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.




