‘ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ಉತ್ಸವ: ನಾಲ್ವರು ಸದಸ್ಯರ ತಾಂತ್ರಿಕ ಸಮಿತಿ ರಚಿಸಿದ ಜಿಲ್ಲಾಧಿಕಾರಿ
ಬೆಂಗಳೂರು: ‘ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ಉತ್ಸವ ಆಯೋಜಿಸುವುದರಿಂದ ಸ್ಥಳೀಯ ಪಿಲಿಕುಳ ಜೈವಿಕ ಉದ್ಯಾನದ ಪ್ರಾಣಿಗಳಿಗೆ ಏನಾದರೂ ತೊಂದರೆ ಉಂಟಾಗಲಿದೆಯೇ ಎಂಬ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಾಲ್ವರು ಸದಸ್ಯರ ತಾಂತ್ರಿಕ ಸಮಿತಿ ರಚಿಸಿದ್ದಾರೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ಪ್ರಾಣಿ ಸಂಗ್ರಹಾಲಯದ ಸಮೀಪ ಉದ್ದೇಶಿತ ಕಂಬಳ ಓಟ ಸ್ಪರ್ಧೆಯನ್ನು ಆಕ್ಷೇಪಿಸಿ, ‘ಪೀಪಲ್ ಫಾರ್ ದಿ ಎಥಿಕಲ್ ಟೀಟ್ಮೆಂಟ್ ಆಫ್ ಅನಿಮಲ್’ (ಪೆಟಾ) ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಅಡ್ವಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಪಿಲಿಕುಳದ ಜೈವಿಕ ಉದ್ಯಾನವನದಲ್ಲಿ ಕಂಬಳ ಆಯೋಜನೆಯಿಂದ ಅಲ್ಲಿನ ಪ್ರಾಣಿಗಳಿಗೆ ತೊಂದರೆ ಆಗಲಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ಆ ಹಿನ್ನೆಲೆಯಲ್ಲಿ ನಾಲ್ವರ ತಜ್ಞರ ಸಮಿತಿ ರಚಿಸಲಾಗಿದೆ’ ಎಂದರು.




