ಚಿಕ್ಕಮಗಳೂರು: ಕಾಡಾನೆ ದಾಳಿಗೆ ರೈತ ಬಲಿ

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ರೈತನೊಬ್ಬ ಸಾವನ್ನಪ್ಪಿರುವ ಘಟನೆ ಎನ್.ಆರ್.ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೆರೆಗದ್ದೆ ಗ್ರಾಮದ ಉಮೇಶ್ (56) ಎಂದು ಗುರುತಿಸಲಾಗಿದೆ. ಸೀತೂರು ಗ್ರಾಮಕ್ಕೆ ಮೂರು ಕಾಡಾನೆಗಳು ಬಂದಿದ್ದು, ಹೊಲ-ಗದ್ದೆ-ತೋಟಗಳ ಮೇಲೆ ದಾಂಧಲೆ ಮಾಡುತ್ತಿದ್ದವು. ಆನೆ ಹಾವಳಿಯಿಂದ ಕಂಗಾಲದ ರೈತರು ಆನೆಗಳನ್ನ ಓಡಿಸಲು ಹೋದಾಗ ಈ ದುರ್ಘಟನೆ ಸಂಭವಿಸಿದೆ.
ಆನೆಗಳು ಕಂಡ ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದರೆ, ಅಧಿಕಾರಿಗಳು ತಡವಾಗಿ ಬಂದ ಹಿನ್ನೆಲೆ ಈ ದುರ್ಘಟನೆ ಸಂಭವಿಸಿದೆ. ಈ ಘಟನೆಗೆ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.