March 15, 2025

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಕೇಂದ್ರ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ

0

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರರ ನಡುವೆ ಬಣ ಬಡಿದಾಟ ತೀವ್ರ ತಾರಕಕ್ಕೆ ಏರಿತ್ತು. ಇದೀಗ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ್ದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿಯು ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಪಕ್ಷ ವಿರೋಧಿ ಹೇಳಿಕೆ ಹಾಗೂ ನಡೆಯನ್ನ ನೀವು ತೋರುತ್ತಿದ್ದೀರಿ. ವಿನಾಕಾರಣ ಪಕ್ಷದ ವಿರುದ್ಧವೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದೀರಿ. ಇದು ಪಕ್ಷದ ಚೌಕಟ್ಟು ಹಾಗೂ ನಿಯಮವನ್ನು ಮೀರಿದೆ. ಹೀಗಾಗಿ ನಿಮ್ಮ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳಬಾರದು ಎಂದು ನೋಟಿಸ್ ನಲ್ಲಿ ಪ್ರಶ್ನಿಸಲಾಗಿದೆ.

ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ತಾವು ಮಾಡುತ್ತಿರುವ ನಿರಂತರ ವಾಗ್ದಾಳಿ ಮತ್ತು ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸುತ್ತಿರುವ ಬಗ್ಗೆ ಪಕ್ಷದ ವಿವಿಧ ವೇದಿಕೆಗಳಲ್ಲಿ ವರದಿಯಾಗಿದೆ. ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ಸಾರ್ವಜನಿಕವಾಗಿ ನೀವು ಹೇಳಿಕೆಗಳನ್ನು ನೀಡುತ್ತಿರುವುದು ಮತ್ತು ನಿಲುವುಗಳನ್ನು ವ್ಯಕ್ತಪಡಿಸುತ್ತಿರುವುದು ತಿಳಿದು ಬಂದಿದೆ. ಈ ಹಿಂದೆಯೂ ಹಲವು ಬಾರಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆಗ ನೀವು ಸದ್ವರ್ತನೆಯ ಭರವಸೆ ನೀಡಿದ್ದರೂ ಅಶಿಸ್ತಿನ ಕೃತ್ಯಗಳು ನಿಮ್ಮಿಂದ ಅವ್ಯಾಹತವಾಗಿ ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಇದು ಪಕ್ಷದ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ. ನಿಮ್ಮ ಹಿರಿತನ ಮತ್ತು ಪಕ್ಷದಲ್ಲಿನ ದೀರ್ಘಾವಧಿಯನ್ನು ಗಮನದಲ್ಲಿಟ್ಟುಕೊಂಡು, ಈ ಹಿಂದೆ ನೀವು ಸಲ್ಲಿಸಿದ ವಿವರಣೆಗಳ ಬಗ್ಗೆ ಕೇಂದ್ರ ಶಿಸ್ತು ಸಮಿತಿಯು ಮೃದುವಾದ ದೃಷ್ಟಿಕೋನವನ್ನು ತೆಗೆದುಕೊಂಡಿತ್ತು ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.

 

 

ನೋಟಿಸ್ ಗೆ ಹತ್ತು ದಿನಗಳ ಒಳಗೆ ತಕ್ಷಣವೇ ಉತ್ತರ ನೀಡಿ. ಇಲ್ಲದಿದ್ದರೆ ನಿಮಗೆ ಏನೂ ಹೇಳಲು ಉಳಿದಿಲ್ಲ ಎಂದು ತಿಳಿದುಕೊಳ್ಳಬೇಕಾಗುತ್ತದೆ. ಶಿಸ್ತು ಸಮಿತಿ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಿದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ತಿಳಿಸುತ್ತೇನೆ. ಹಿಂದುತ್ವದ ಹೋರಾಟ, ಭ್ರಷ್ಟಾಚಾರದ ವಿರೋಧ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ವಂಶವಾಹಿ ರಾಜಕೀಯ ಸಂಬಂಧ ನನ್ನ ಬದ್ಧತೆ ಅಚಲವಾಗಿ ಉಳಿಯುತ್ತದೆ ಎಂದು ತಮ್ಮ X ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಬಿವೈ ವಿಜಯೇಂದ್ರ ಆಪ್ತರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಕಾರ್ಯಕರ್ತರು ಯತ್ನಾಳ್ ನಿಂದ ಏನು ಉಪಯೋಗ ಇಲ್ಲ. ಆತನಿಗೆ ಉಗಿದು ಪಕ್ಷದಿಂದ ಉಚ್ಚಾಟನೆ ಮಾಡಿ ಬಿಸಾಕಿ ಎಂದು ಏಕವಚನದಲ್ಲಿ ಕಿಡಿ ಕಾರಿದ್ದರು. ಇದರ ಬೆನ್ನಲ್ಲೇ ನಿನ್ನೆ ಬೆಂಗಳೂರಿನಲ್ಲಿರುವ ಡಾಲರ್ಸ್ ಕಾಲೋನಿಯಲ್ಲಿ ಬಿಎಸ್ ಯಡಿಯೂರಪ್ಪ ಮನೆಗೆ ಮಾಜಿ ಶಾಸಕರು ಭೇಟಿ ನೀಡಿ ಯತ್ನಾಳ ಉಚ್ಚಾಟನೆಗೆ ಆಗ್ರಹಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!