ಬಸ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ: ಎಂಟು ಮಂದಿ ಮೃತ್ಯು
ಉತ್ತರ ಪ್ರದೇಶ: ಸ್ಲೀಪರ್ ಬಸ್ ಹಾಗೂ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಮೃತಪಟ್ಟು ಹತ್ತೊಂಬತ್ತು ಮಂದಿ ಗಾಯಗೊಂಡಿರುವ ಘಟನೆ ಕನ್ನೌಜ್ ಜಿಲ್ಲೆಯ ಔರೈಯಾ ಗಡಿಯ ಸಮೀಪ ಆಗ್ರಾ- ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.
40 ಮಂದಿ ಪ್ರಯಾಣಿಸುತ್ತಿದ್ದ ಬಸ್ಸು ಲಕ್ನೋದಿಂದ ದೆಹಲಿಗೆ ಹೊರಟಿತ್ತು. ಆಗ್ರಾ- ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ ಎಂದು ಹೇಳಲಾಗಿದ್ದು, ಘಟನೆ ನಡೆದ ಕೂಡಲೇ ಪೊಲೀಸರು ಮತ್ತು ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸೈಫಾಯಿ ವೈದ್ಯಕೀಯ ಕಾಲೇಜಿಗೆ ಸಾಗಿಸಿದರು.
ಘಟನಾ ಸ್ಥಳಕ್ಕೆ ಡಿಎಂ, ಎಸ್ಪಿ ಸೇರಿದಂತೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದರು.




