ವಾಹನಗಳಿಗೆ ಬಸ್ ಢಿಕ್ಕಿ: ಆರು ಮಂದಿ ಸಾವು, 49 ಮಂದಿ ಗಾಯ
ಮುಂಬೈ: ಮುಂಬೈನ ಕುರ್ಲಾ ಪ್ರದೇಶದಲ್ಲಿ ಸೋಮವಾರ ರಾತ್ರಿ ಪಾದಚಾರಿಗಳು ಮತ್ತು ವಾಹನಗಳಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 49 ಮಂದಿ ಗಾಯಗೊಂಡಿದ್ದಾರೆ. ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ರಾತ್ರಿ 9:45 ರ ಸುಮಾರಿಗೆ ಘಟನೆ ಸಂಭವಿಸಿದ್ದು, ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ ಸಂಸ್ಥೆ (ಬೆಸ್ಟ್) ಬಸ್ ಚಾಲಕನ ನಿಯಂತ್ರಣ ತಪ್ಪಿ, ಹಲವಾರು ವಾಹನಗಳು ಮತ್ತು ಪಾದಚಾರಿಗಳ ಮೇಲೆ ಹರಿದು ಹೌಸಿಂಗ್ ಸೊಸೈಟಿಯ ಗೋಡೆಗೆ ಡಿಕ್ಕಿ ಹೊಡೆದಿದೆ.
ಘಟನೆ ನಡೆದಾಗ ಬಸ್ ಕುರ್ಲಾ ನಿಲ್ದಾಣದಿಂದ ಅಂಧೇರಿಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ನಿಯಂತ್ರಣ ತಪ್ಪಿದ ಬಸ್ ಎದುರಿಗೆ ಸಿಕ್ಕ ಜನರು, ವಾಹನಗಳಿಗೆ ಹೊಡೆಯುತ್ತಾ ಸಾಗಿತು. ಕೊನೆಗೆ ಗೋಡೆಗೆ ಡಿಕ್ಕಿ ಹೊಡೆದ ನಂತರ ಬಸ್ ನಿಂತಿತು.




