ಸಿ.ಟಿ.ರವಿ ಆ ಪದ ಬಳಸಿಲ್ಲದಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಸವಾಲು
ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಬಗ್ಗೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರ ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿದ್ದು, ಎಂಎಲ್ಸಿ ಸಿ.ಟಿ.ರವಿಯವರು ನನ್ನ ಬಗ್ಗೆ ಅವಾಚ್ಯ ಶಬ್ದ ಬಳಸಿಲ್ಲವೆಂದಾದರೆ ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಗೆ ಬಂದು ಆಣೆ ಪ್ರಮಾಣ ಮಾಡಲಿ ನೋಡೋಣ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಸವಾಲು ಹಾಕಿದ್ದಾರೆ.
ಮಾಧ್ಯಮಗಳಿಗೆ ನೀಡಿದ ಸಂದರ್ಶನ ವೇಳೆ ಮಾತನಾಡಿ ಬೆಳಗಾವಿ ಸುವರ್ಣಸೌಧದ ಪರಿಷತ್ ಕಲಾಪದಲ್ಲಿ ಸಿ.ಟಿ ರವಿಯವರು ಅಸಾಂವಿಧಾನಿಕ ಪದ ಬಳಸಿ ನಿಂದಿಸಿದ್ದಾರೆ ಎಂದು ನಾನು ನಾಟಕ ಮಾಡೋದಕ್ಕೆ ಆಗುತ್ತಾ? ಸದನದಲ್ಲಿ ನಿಂತು ಸುಳ್ಳು ಆರೋಪ ಮಾಡೋದಕ್ಕೆ ಆಗುತ್ತಾ? ಸುಳ್ಳು ಹೇಳೋದಕ್ಕೆ ನನಗೇನು ಹುಚ್ಚಾ? ನಾಟಕವಾಡಿ ರಾಜಕಾರಣದಲ್ಲಿ ನಾನು ಏನಾದ್ರೂ ಗಳಿಸೋದು ಇದ್ಯಾ? ಎಂದು ಲಕ್ಷ್ಮೀ ಹೆಬ್ಬಾಳ್ಳರ್ ಪ್ರಶ್ನಿಸಿದರು.
ರಾಮಾಯಣ, ಮಹಾಭಾರತ ಆಗಿದ್ದು, ಮಹಿಳೆಯನ್ನು ಅಪಮಾನ ಮಾಡಿದ್ದಕ್ಕೆ. ಅಲ್ಲಿ ಅಪಮಾನ ಮಾಡಿದ ಎಲ್ಲರಿಗೂ ಶಿಕ್ಷೆ ಆಗಿದೆ. ಇಲ್ಲಿಯೂ ಆಗುತ್ತೆ. ಸಿ.ಟಿ ರವಿ ಅವರು ಆ ರೀತಿ ಹೇಳಿಲ್ಲ ಅನ್ನೋದಾದ್ರೆ, ಧರ್ಮಸ್ಥಳಕ್ಕೆ ಬಂದು ಆಣೆ, ಪ್ರಮಾಣ ಮಾಡಲಿ. ಆಣೆ ಮಾಡಲಿಕ್ಕೆ ನಾನೂ ನನ್ನ ಕುಟುಂಬ ಸಮೇತವಾಗಿ ನಾನು ಬರ್ತೀನಿ ಎಂದು ಆಗ್ರಹಿಸಿದರು.




