ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು

ಹುಬ್ಬಳ್ಳಿ: ಉಣಕಲ್ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (18) ಮೃತಪಟ್ಟ ಮಾಲಾಧಾರಿಗಳು.
ಇನ್ನುಳಿದ 7 ಮಂದಿ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕಿಮ್ಸ್ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಡಿಸೆಂಬರ್ 22ರ ರಾತ್ರಿ ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳು ದೇಗುಲದಲ್ಲಿ ರಾತ್ರಿ ಮಲಗಿದ್ದಾಗ ಗ್ಯಾಸ್ ಸೋರಿಕೆಯಾಗಿದ್ದು, ದೀಪದ ಬೆಂಕಿ ತಗುಲಿ ಸ್ಫೋಟಗೊಂಡಿತ್ತು. ಈ ವೇಳೆ 9 ಮಂದಿ ಗಂಭೀರ ಗಾಯಗೊಂಡಿದ್ದರು. ಅವರನ್ನೆಲ್ಲ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಚಿವ ಸಂತೋಷ್ ಲಾಡ್ ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕರೆಸಿಕೊಂಡು ಚಿಕಿತ್ಸೆ ಕೊಡಿಸುವ ಕೆಲಸ ಮಾಡಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಆಗಮಿಸಿದ ಇಬ್ಬರು ನುರಿತ ಪ್ಲಾಸ್ಟಿಕ್ ಸರ್ಜರಿ ವೈದ್ಯರು, ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಪರಿಶೀಲನೆ ಮಾಡಿದ್ದಾರೆ.