ವಿಟ್ಲ: ನಾರ್ಶ ಬೀಡಿ ಮಾಲಕನ ಮನೆ ದರೋಡೆ ಪ್ರಕರಣ: ಸ್ಥಳೀಯ ನಿವಾಸಿ ಸಿರಾಜ್ ಸಹಿತ ಮತ್ತೆ ನಾಲ್ವರು ಆರೋಪಿಗಳ ಬಂಧನ
ವಿಟ್ಲ: ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ ಈ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕೃತ್ಯಕ್ಕೆ ಮನೆಯ ಮಾಹಿತಿ ನೀಡಿದ್ದ ಸ್ಥಳಿಯ ಆರೋಪಿ ಕೊಳ್ನಾಡು ಬಂಟ್ವಾಳ ನಿವಾಸಿ ಸಿರಾಜುದ್ದೀನ್ (37) ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿ, ಆತ ನೀಡಿದ ಮಾಹಿತಿಯ ಅಧಾರದಲ್ಲಿ ಬಂಟ್ವಾಳ ನಿವಾಸಿ ಮೊಹಮ್ಮದ್ ಇಕ್ಬಾಲ್ (38) ಹಾಗೂ ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್ ಅನ್ಸಾರ್ (27) ಎಂಬವರನ್ನು ದಸ್ತಗಿರಿ ಮಾಡಿರುವುದಾಗಿದೆ. ಸದ್ರಿ ಪ್ರಕರಣದ ತನಿಖೆ ಮುಂದುವರಿದಂತೆ, ದರೋಡೆ ಕೃತ್ಯಕ್ಕೆ ಮೂಲ ಸೂತ್ರದಾರನಾದ ಕೇರಳದ ಶಫೀರ್ ಬಾಬು (48) ಎಂಬಾತನನ್ನು ಬಂಧಿಸಿದ್ದು, ಈತನು ಕೇರಳ ರಾಜ್ಯದ ತ್ರಿಶೂರು ಜಿಲ್ಲೆಯ ಕೊಡಂಗಲ್ಲೂರು ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕನಾಗಿರುವುದಾಗಿದ್ದಾನೆ.
ತನಿಖಾ ತಂಡವು ಈಗಾಗಲೇ ಕೇರಳ ಕೊಲ್ಲಂ ನಿವಾಸಿಗಳಾದ ಅನಿಲ್ ಫರ್ನಾಂಡಿಸ್ (49), ಸಚ್ಚಿನ್ ಟಿ ಎಸ್ (29) ಹಾಗೂ ಶಬಿನ್ ಎಸ್ (27) ಎಂಬವರುಗಳನ್ನು ಬಂಧಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುತ್ತಾರೆ.
ಸದ್ರಿ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಯತೀಶ್ ಎನ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ, ಜಿಲ್ಲಾ ವ್ಯಾಪ್ತಿಯ ಠಾಣೆಗಳಿಂದ ಅಪರಾಧ ಕೃತ್ಯಗಳ ತನಿಖೆಯಲ್ಲಿ ಪರಿಣಿತರಾದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ತಂಡಗಳು ಕಾರ್ಯಾಚರಣೆ ನಡೆಸಿರುತ್ತದೆ.




