ಕುಂಭಮೇಳಕ್ಕೆ ಹೋಗುತ್ತಿದ್ದಾಗ ಲಾರಿ, ಕ್ರೂಸರ್ ನಡುವೆ ಢಿಕ್ಕಿ: ಒಂದೇ ಕುಟುಂಬದ 6 ಜನ ಸ್ಥಳದಲ್ಲೇ ಸಾವು
ಲಕ್ನೋ: ಭೀಕರ ಅಪಘಾತಕ್ಕೆ ಪ್ರಯಾಗ್ರಾಜ್ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.
ಲಾರಿ ಮತ್ತು ಕ್ರೂಸರ್ ನಡುವೆ ಇಂದು ಬೆಳಗ್ಗೆ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 6 ಮಂದಿ ಸಾವನ್ನಪ್ಪಿದ್ದು ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್ (43) ನೀಲಮ್ಮ (60) ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ.
ಒಂದೇ ಗಾಡಿಯಲ್ಲಿ ಒಟ್ಟು 12 ಜನ ಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್ರಾಜ್ನಿಂದ ಕಾಶಿ ಕಡೆಗೆ ಕ್ರೂಸರ್ನಲ್ಲಿ ತೆರಳುತ್ತಿದ್ದರು. ಇಂದು ಬೆಳಗ್ಗೆ ಕಾಶಿಯಿಂದ 20 ಕಿಲೋ ಮೀಟರ್ ದೂರದಲ್ಲಿ ಲಾರಿಗೆ ಹಿಂದಿನಿಂದ ಕ್ರೂಸರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಉಳಿದವರ ಸ್ಥಿತಿ ಗಂಭೀರವಾಗಿದೆ.




