ಉಳ್ಳಾಲ: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ: ಪ್ರಕರಣ ಕಿಂಗ್ ಪಿನ್ ಆರೋಪಿ ಕನ್ಯಾನದ ಓರ್ವ ಸಹಿತ ಇಬ್ಬರ ಬಂಧನ

ಮಂಗಳೂರು: ಕಳೆದ ಜನವರಿಯಲ್ಲಿ ಕೆ.ಸಿ ರೋಡ್ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಮುಖ ಆರೋಪಿಯಾದ ಬಂಟ್ವಾಳ ಕನ್ಯಾನ ಮೂಲದ ಭಾಸ್ಕರ್ ಬೆಳ್ಳಪಾಡ ಯಾನೆ ಶಶಿ ತೇವರ್ (69) ಮತ್ತು ಕೆ.ಸಿ.ರೋಡ್ ನಿವಾಸಿ ಮಹಮ್ಮದ್ ನಝೀರ್ ಎಂಬಿಬ್ಬರನ್ನು ಬಂಧಿಸಲಾಗಿದೆ.
ಪೊಲೀಸರು ಭಾಸ್ಕರ್ ಬೆಳ್ಳಪಾಡನನ್ನು ಫೆ. 24 ರಂದು ಬೆಂಗಳೂರಿನ ರೈಲ್ವೇ ಸ್ಟೇಷನ್ ಬಳಿ ವಶಕ್ಕೆ ಪಡೆದು ಆತನನ್ನು ವಿಚಾರಿಸಿದಾಗ ಮಹಮ್ಮದ್ ನಝೀರ್ ಬಗ್ಗೆ ಮಾಹಿತಿ ನೀಡಿದ್ದ.
ನಝೀರ್ ಮತ್ತು ಭಾಸ್ಕರ್ ಕಳೆದ ಏಳು ವರ್ಷಗಳಿಂದ ಸಂಪರ್ಕದಲ್ಲಿದ್ದು, ಕೋಟೆಕಾರ್ ಬ್ಯಾಂಕ್ ದರೋಡೆ ಕೃತ್ಯವೆಸಗಲು ಸುಮಾರು 6 ತಿಂಗಳಿನಿಂದ ಇತರ ಆರೋಪಿಗಳೊಂದಿಗೆ ಸೇರಿ ಸಂಚು ರೂಪಿಸಿ ಕೃತ್ಯವೆಸಗಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ನಝೀರ್ ಎಂಬಾತ ಭಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ ಜೊತೆ ದರೋಡೆ ಪ್ರಕರಣದಲ್ಲಿ ಶಾಮೀಲಾಗಿದ್ದು, ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡವನ್ನು ಆರೋಪಿಗಳಿಗೆ ತೋರಿಸಿಕೊಟ್ಟು ದರೋಡೆ ನಡೆಸಬೇಕಾದ ದಿನ, ವೇಳೆ ಹಾಗೂ ಸೊಸೈಟಿಯಲ್ಲಿರುವ ಸಿಬ್ಬಂದಿಗಳ ಬಗ್ಗೆ ಮತ್ತು ಕೃತ್ಯದ ನಂತರ ತಪ್ಪಿಸಿಕೊಂಡು ಹೋಗುವ ಮಾರ್ಗ ಮುಂತಾದ ಮಾಹಿತಿಯನ್ನು ನಝೀರ್ ಆರೋಪಿಗಳಿಗೆ ನೀಡಿದ್ದ ಎಂದು ತಿಳಿದು ಬಂದಿದೆ.
ಪ್ರಕರಣದ ಆರೋಪಿಗಳ ಪತ್ತೆಯ ಬಗ್ಗೆ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ ವಾಲ್ ಐ.ಪಿ.ಎಸ್ ರವರ ನಿರ್ದೆಶನದಂತೆ ಉಪ ಪೊಲೀಸ್ ಆಯುಕ್ತರಾದ ಸಿದ್ಧಾರ್ಥ ಗೋಯಲ್ ಐ.ಪಿ.ಎಸ್ ಮತ್ತು ರವಿಶಂಕರ್ ಕೆ.ಎಸ್.ಪಿ.ಎಸ್ ಮತ್ತು ದಕ್ಷಿಣ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷರಾದ ಟಿ. ಡಿ ನಾಗರಾಜ್ ಉಳ್ಳಾಲ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಉಳ್ಳಾಲ ಠಾಣಾ ಪಿ.ಎಸ್.ಐ ರವರಾದ ಶೀತಲ್ ಅಲಗೂರ, ಸಂತೋಷ್ ಕುಮಾರ್ ಡಿ ಮತ್ತು ಸಿಬ್ಬಂದಿಗಳು ಆರೋಪಿಗಳ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ಆರೋಪಿ ಬಾಸ್ಕರ್ ಬೆಳ್ಚಪಾಡ ಎಂಬಾತನು ಸುಮಾರು 25 ವರ್ಷಗಳಿಂದ ಹುಟ್ಟೂರಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನವನ್ನು ಬಿಟ್ಟು ಮುಂಬೈನಲ್ಲಿ ವಾಸವಾಗಿದ್ದು ಈತನ ವಿರುದ್ಧ ಬೇರೆ – ಬೇರೆ ಪೊಲೀಸ್ ಠಾಣೆಯಲ್ಲಿ ಡಕಾಯಿತಿ, ಸುಲಿಗೆ, ಶಸ್ತ್ರಾಸ್ತ್ರ ಕಾಯ್ದೆಯಡಿಲ್ಲಿ ಪ್ರಕರಣಗಳು ದಾಖಲಾಗಿರುತ್ತವೆ.
ಪ್ರಕರಣಗಳು
1) 2011 ರಲ್ಲಿ ಹೊಸ ದೆಹಲಿಯಲ್ಲಿ ದರೋಡೆಗೆ ಪ್ರಯತ್ನದ ಪ್ರಕರಣ.
2) 2021 ರಲ್ಲಿ ಮುಂಬೈ ಕ್ರೈಂ ಬ್ರಾಂಚ್ ಸಿ.ಐ.ಡಿ ಠಾಣಾ ವ್ಯಾಪ್ತಿಯಲ್ಲಿ ಭಾರತ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಪ್ರಕರಣ.
3) 2022 ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ.
4) 2022 ರಲ್ಲಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಪ್ರಯತ್ನ ಪ್ರಕರಣ.
ಜನವರಿ 17ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಸಿ.ರೋಡ್ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಪಿಸ್ತೂಲ್ ತೋರಿಸಿ ಒಳಬಂದ ಐವರು ದರೋಡೆಕೋರರು ಕೆ.ಜಿಗಟ್ಟಲೆ ಚಿನ್ನ ಮತ್ತು ನಗದು ದರೋಡೆ ಮಾಡಿದ್ದರು.
ಈ ಪ್ರಕರಣವನ್ನು ಪತ್ತೆ ಹಚ್ಚಿದ ಪೊಲೀಸರು ಆರೋಪಿಗಳು ದರೋಡೆಗೈದ ಚಿನ್ನಾಭರಣ ಮತ್ತು ಹಣವನ್ನು ವಶಪಡಿಸಿಕೊಂಡಿದ್ದು, ಪ್ರಕರಣದಲ್ಲಿ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ