ರಾಜ್ಯ ಸರಕಾರದಿಂದ ಮತ್ತೆ ವಿದ್ಯುತ್ ದರ ಏರಿಕೆಯ ಶಾಕ್: ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ, ಏಪ್ರಿಲ್ 1ರಿಂದಲೇ ಹೊಸ ಆದೇಶ ಜಾರಿ
ಬೆಂಗಳೂರು : ಈಗಾಗಲೇ ಎಲ್ಲ ಅಗತ್ಯ ವಸ್ತುಗಳ ಮತ್ತು ಸೇವೆಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ಸರಕಾರ ಮತ್ತೆ ವಿದ್ಯುತ್ ದರ ಏರಿಕೆಯ ಶಾಕ್ ಕೊಟ್ಟಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ್ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿ ಹೆಚ್ಚಳದ ಮೊತ್ತವನ್ನು ಗ್ರಾಹಕರಿಂದ ವಸೂಲಿ ಮಾಡಲು ಕೆಇಆರ್ಸಿ ಮುಂದಾರುವುದರ ಪರಿಣಾಮವಾಗಿ ದರ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.
ಗ್ರಾಹಕರ ಮಾಸಿಕ ಬಿಲ್ನಲ್ಲಿ ಉಲ್ಲೇಖ ಮಾಡಿ ಹೆಚ್ಚುವರಿ ದರ ವಸೂಲಿ ಮಾಡಲಾಗುತ್ತದೆ. ಮುಂದಿನ ಮೂರು ಆರ್ಥಿಕ ವರ್ಷಗಳಿಗೆ ಅನ್ವಯ ಆಗುವಂತೆ ಈ ಆದೇಶ ಹೊರಡಿಸಲಾಗಿದೆ.
ಗೃಹಜ್ಯೋತಿ ಯೋಜನೆಯಿಂದಾಗಿ ನಷ್ಟ ಆಗಿಲ್ಲ. ಗೃಹಜ್ಯೋತಿ ನಷ್ಟದಿಂದ ವಿದ್ಯುತ್ ದರ ಏರಿಕೆ ಮಾಡಲಾಗಿಲ್ಲ. ನಾವು 200 ಯೂನಿಟ್ ವಿದ್ಯುತ್ ಉಚಿತ ಕೊಟ್ಟಿದ್ದೇವೆ. 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ. ಬಿಜೆಪಿಯವರು ಶ್ರೀಮಂತರ ಪರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರ ದರ ಏರಿಕೆ ಮಾಡುವುದಿಲ್ಲ. ಸ್ವಾಯತ್ತ ಸಂಸ್ಥೆ ದರ ಏರಿಕೆ ಮಾಡುತ್ತದೆ. ವಿದ್ಯುತ್ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ತೊಂದರೆ ಆಗುವುದಿಲ್ಲ. ಈ ವಿಚಾರದಲ್ಲಿ ಬಿಜೆಪಿ ಆರೋಪ ಸರಿಯಲ್ಲ ಎಂದು ಸಚಿವ ಶರಣಪ್ರಕಾಶ್ ಪಾಟೀಲ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.




