ಕೇರಳ: ಎಸ್ ಡಿ ಪಿ ಐ ಮುಖಂಡನ ಹತ್ಯೆ ಪ್ರಕರಣ:
ಇಬ್ಬರು ಸಂಘಪರಿವಾರದ ಕಾರ್ಯಕರ್ತರ ಬಂಧನ
ಆಲಪ್ಪುಝ: ಜಿಲ್ಲೆಯಲ್ಲಿ ಶನಿವಾರ ದುಷ್ಕರ್ಮಿಗಳಿಂದ ಕ್ರೂರವಾಗಿ ಹತ್ಯೆಗೈಯಲ್ಪಟ್ಟ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ನಾಯಕ ಕೆ.ಎಸ್.ಶಾನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಎರಾಲಾ ಪೊಲೀಸರು ಇಬ್ಬರನ್ನು ಆರೆಸ್ಸೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಇಬ್ಬರು ಆರೋಪಿಗಳನ್ನು ರತೇಶ್ ಮತ್ತು ಪ್ರಸಾದ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ಆರೆಸ್ಸಿಸ್ಸಿನ ಸಕ್ರಿಯ ಕಾರ್ಯಕರ್ತರಾಗಿದ್ದರು ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಸಖರೆ ತಿಳಿಸಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಒಟ್ಟಾರೆಯಾಗಿ, 12 ಮಂದಿ ಭಾಗಿಯಾಗಿದ್ದು, ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುತ್ತದೆ ಎಂದು ಹೇಳಿದ್ದಾರೆ.
ಇದರಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಗುರುತಿಸಿದ್ದೇವೆ. ಅವರನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು. ಅಲ್ಲದೇ ಈ ಪ್ರಕರಣದಲ್ಲಿ ಏನಾದರೂ ದೊಡ್ಡ ಪಿತೂರಿ ಇದೆಯೇ ಎನ್ನುವುದನ್ನೂ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಎಡಿಜಿಪಿ ವಿಜಯ್ ಸಖರೆ ಹೇಳಿದ್ದಾರೆ.





