ಉಡುಪಿ: ಗುಜರಿ ಸಾಮಗ್ರಿ ಸಾಗಿಸುತ್ತಿದ್ದ ಲಾರಿ ಪಲ್ಟಿ
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಗುಜರಿ ಐಟಮ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಅಂಬಾಗಿಲು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಅಪಘಾತದಲ್ಲಿ ಲಾರಿ ಚಾಲಕ ಸೇರಿ ಆರು ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಜರಿ ಸಾಮಾನುಗಳನ್ನು ಕೊಂಡೊಯ್ಯುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿಯೇ ಪಲ್ಟಿಯಾಯಿತು. ಇದರ ಪರಿಣಾಮ ಅದರಲ್ಲಿದ್ದ ಕಾರ್ಮಿಕರು ಸೇರಿ ಒಟ್ಟು ಆರು ಮಂದಿ ಗಾಯಗೊಂಡಿದ್ದಾರೆ.
ಈ ದುರ್ಘಟನೆ ಸಂಭವಿಸುವ ಮುಂಚೆ ಅದೇ ಸ್ಥಳದಲ್ಲಿ ಬೈಕ್ ಸವಾರನೊಬ್ಬ ತನ್ನ ಬೈಕ್ ನಿಲ್ಲಿಸಿ ಪಕ್ಕದಲ್ಲಿ ನಿಂತಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾನೆ. ಆದರೆ ಈತನ ಬೈಕ್ ಮಾತ್ರ ಲಾರಿಯ ಅಡಿಗೆ ಬಿದ್ದು ನಜ್ಜುಗುಜ್ಜಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.




