April 27, 2025

ಮುಲ್ಕಿಯ ರಿಕ್ಷಾ ಚಾಲಕ ಶರೀಫ್ ಕೊಲೆ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

0

ಮಂಜೇಶ್ವರ:ದ.ಕ. ಜಿಲ್ಲೆಯ ಮುಲ್ಕಿ ಕೊಲ್ನಾಡು ನಿವಾಸಿ, ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಎಂಬವರನ್ನು ಹತ್ಯೆ ಮಾಡಿ ಮಂಜೇಶ್ವರ ಸಮೀಪ ಬಾವಿಗೆಸೆದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪೊಲೀಸರು ವಶಕ್ಕೆ ಪಡೆದಿರುವ ಇಬ್ಬರು ಕೂಡಾ ಮಂಗಳೂರು ನಿವಾಸಿಗಳು ಎಂದು ತಿಳಿದುಬಂದಿದೆ.

ಎ.9ರಂದು ರಾತ್ರಿಯಿಂದ ನಾಪತ್ತೆಯಾಗಿದ್ದ ಮುಹಮ್ಮದ್ ಶರೀಫ್ ಅವರ ಮೃತದೇಹ ಎ.10ರಂದು ರಾತ್ರಿ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿತ್ತು. ಅವರನ್ನು ಕೊಲೆಗೈದು ಬಾವಿಗೆ ಎಸೆದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿತ್ತು.

 

 

ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಮಂಜೇಶ್ವರ ಠಾಣಾ ಪೊಲೀಸರಿಗೆ ಮಂಗಳೂರಿನಿಂದ ಮೂವರು ಶರೀಫ್ ಅವರ ರಿಕ್ಷಾವನ್ನು ಬಾಡಿಗೆಗೆ ಪಡೆದು ತೆರಳಿದ್ದರು ಎಂಬ ಮಾಹಿತಿ ಲಭಿಸಿತ್ತು. ಶರೀಫ್ ಅವರ ಆಟೋ ರಿಕ್ಷಾ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಮಂಜೇಶ್ವರ ಕಡೆಗೆ ಬರುತ್ತಿರುವುದು ತಲಪಾಡಿ ಟೋಲ್ ಗೇಟಿನ ಸಿಸಿಟಿವಿ ಕ್ಯಾಮರಾದಲ್ಲೂ ಸೆರೆಯಾಗಿತ್ತು. ಈ ಎಲ್ಲಾ ಮಾಹಿತಿಗಳನ್ನು ಕೇಂದ್ರೀಕರಿಸಿ ತನಿಖೆ ಮುಂದುವರಿಸಿರುವ ಪೊಲೀಸರು ಇದೀಗ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!