ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಏಳು ಮಂದಿ ಪೊಲೀಸ್ ವಶಕ್ಕೆ!
ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಒಟ್ಟು ಏಳು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅವರ ವಿಚಾರಣೆ ನಡೆಯುತ್ತಿದೆ ಎಂದು ಹೇಳಲಾಗಿದೆ.
ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರೋಚಕ ತಿರುವು ಪಡೆದಿದ್ದು, ಕೊಲೆ ಕೃತ್ಯದಲ್ಲಿ ಹಿಂದೂಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂಬ ಮಾಹಿತಿ ಇದೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರ ತಂಡ ಈಗಾಗಲೇ ಐದಕ್ಕೂ ಅಧಿಕ ಮಂದಿ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಲ್ಲಿ ಇಬ್ಬರು ಹಿಂದೂಗಳು ಎನ್ನಲಾಗುತ್ತಿದೆ.
ಸುಹಾಸ್ ಶೆಟ್ಟಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಹೊರ ಜಿಲ್ಲೆಯ ಇಬ್ಬರು ಹಿಂದೂಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ಬಂಧಿತರು ಅಪರಾಧ ಹಿನ್ನೆಲೆಯವರು ಎನ್ನಲಾಗುತ್ತಿದೆ.
ಮತೀಯ ಕಾರಣಕ್ಕೆ ಸುಹಾಸ್ ಶೆಟ್ಟಿ ಕೊಲೆ ನಡೆದಿದೆ ಎಂದು ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಆರೋಪಿಸಿದ್ದರು. ಫಾಝಿಲ್ ಕೊಲೆಗೆ ಪ್ರತೀಕಾರವಾಗಿ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎಂಬ ಅನುಮಾನಗಳು ವ್ಯಕ್ತವಾಗಿತ್ತು. ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಜಿಲ್ಲೆ ಬಂದ್ ವೇಳೆ ಮುಸ್ಲಿಮರಿಗೆ ಚೂರಿ ಇರಿತ ಆಗಿದ್ದು, ಮುಸ್ಲಿಮರ ಮೇಲೆ ಹಲ್ಲೆ ನಡೆದಿರುವುದು ವರದಿಯಾಗಿದೆ
ಇದೀಗ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹಿಂದೂಗಳ ಬಂಧನ ನಡೆದಿದೆ ಎಂದು ತಿಳಿದುಬಂದಿದ್ದು, ಕೊಲೆ ಕೃತ್ಯಕ್ಕೆ ಬೇರೆ ಆಯಾಮ ಇದೆ ಎನ್ನಲಾಗುತ್ತಿದೆ. ಅಪರಾಧ ಜಗತ್ತಿನ ವೈಯಕ್ತಿಕ ದ್ವೇಷದ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ಇದೆ. ರೌಡಿಶೀಟರ್ ಸುಹಾಸ್ ಶೆಟ್ಟಿ ಗ್ಯಾಂಗ್ವಾರ್ಗೆ ಬಲಿಯಾಗಿರುವ ಅನುಮಾನ ವ್ಯಕ್ತವಾಗಿದೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಪೊಲೀಸರು ಈವರೆಗೆ ಅಧಿಕೃತ ಮಾಹಿತಿ ನೀಡಿಲ್ಲ. ಮಂಗಳೂರು ನಗರ ಪೊಲೀಸ್ ಆಯುಕ್ತರು ಶೀಘ್ರದಲ್ಲಿ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ವಿವರ ಹಾಗೂ ಅಧಿಕೃತ ಪ್ರಕಟಣೆ ಪೊಲೀಸ್ ಇಲಾಖೆಯಿಂದ ಇನ್ನಷ್ಟೇ ಬರಬೇಕಿದೆ.




