ಮಂಗಳೂರು: ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ: ಪ್ರಯಾಣಿಕರು ಏರ್ಲೈನ್ ಗಳೊಂದಿಗೆ ಖಚಿತ ಮಾಹಿತಿ ಪಡೆಯಲು ಸೂಚನೆ
ಮಂಗಳೂರು: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ದಾಳಿ ನಡೆಸಿದ ಹಿನ್ನೆಲೆ, ಕೆಲ ವಾಯು ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಇದರಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಮಂಗಳೂರು ವಿಮಾನ ನಿಲ್ದಾಣದ ಆಡಳಿತ ವಿಭಾಗ ಮಾಹಿತಿ ನೀಡಿದೆ.
ವಿಮಾನ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇರುವುದರಿಂದ, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಬರುವ ಮುನ್ನವೇ ಪ್ರಯಾಣಿಕರು ವಿಮಾನವನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಏರ್ಲೈನ್ ಗಳೊಂದಿಗೆ ಪರಿಶೀಲಿಸಿ ಮಾಹಿತಿ ಪಡೆದುಕೊಳ್ಳುವಂತೆ ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ.
ಭಾರತವು ಪಾಕಿಸ್ತಾನದ ಉಗ್ರರ ತಾಣಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ವಾಯುನೆಲೆಯನ್ನು ನಿರ್ಬಂಧಿಸಲಾಗಿದ್ದು, ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ 165ಕ್ಕೂ ಹೆಚ್ಚು ವಿಮಾನಯಾನವನ್ನು ಸ್ಥಗಿತಗೊಳಿಸಿದೆ.




