ಆಪರೇಷನ್ ಸಿಂಧೂರ್ ಬೆನ್ನಲ್ಲೇ ಕರಾವಳಿ ಭಾಗದಲ್ಲಿ ಹೈಅಲರ್ಟ್
ಮಂಗಳೂರು: ಪಾಕಿಸ್ಥಾನದೊಂದಿಗೆ ಯುದ್ಧ ಸನ್ನಿವೇಶ ನಿರ್ಮಾಣ, ಪಾಕ್ ಉಗ್ರ ನೆಲೆಗಳ ಮೇಲೆ ಭಾರತದ ದಾಳಿ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲೂ ಮುನ್ನೆಚ್ಚರಿಕ ಕ್ರಮಗಳನ್ನು ವಹಿಸಲಾಗಿದೆ. ಬುಧವಾರ ಮಂಗಳೂರಿನ ಹಳೆ ಬಂದರು ಪ್ರದೇಶದಲ್ಲಿ ಕರಾವಳಿ ಕಾವಲು ಪೊಲೀಸ್ ಪಡೆಯ ಬೋಟುಗಳು ಗಸ್ತು ನಡೆಸಿವೆ. ಜತೆಗೆ ಬೋಟುಗಳನ್ನು ಪರಿಶೀಲಿನೆ ನಡೆಸುವ ಅಣಕು ಕಾರ್ಯಾಚರಣೆಯನ್ನೂ ನಡೆಸಿವೆ.
ಕರಾವಳಿ ತೀರ ಪ್ರದೇಶ, ಆಳ ಸಮುದ್ರದಲ್ಲಾಗುವ ಚಟುವಟಿಕೆಗಳ ಮೇಲೆ ಭಾರತೀಯ ನೌಕಾಪಡೆ, ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪಡೆಗಳು ಹದ್ದಿನ ಕಣ್ಣಿಟ್ಟಿವೆ. ಈಗಾಗಲೇ ಕೋಸ್ಟ್ಗಾರ್ಡ್ ನೌಕೆಗಳು ದಿನದ 24 ಗಂಟೆಯೂ ಸಮುದ್ರದಲ್ಲಿ ಗಸ್ತು ತಿರುಗುತ್ತಿವೆ. ವಿದೇಶಿ ಹಡಗುಗಳ ಮೇಲೆ ತೀವ್ರ ನಿಗಾ ಇರಿಸಿವೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ 324 ಕಿಮೀ ಉದ್ದದ ಕರಾವಳಿ ಪ್ರದೇಶದಲ್ಲಿ ಮಂಗಳೂರು, ಮಲ್ಪೆ, ಕಾರವಾರ, ಕುಮಟಾ, ಭಟ್ಕಳ, ಹೆಜಮಾಡಿ, ಹೊನ್ನಾವರ, ಬೇಲೆಕೇರಿ ಮತ್ತು ಗಂಗೊಳ್ಳಿಯಲ್ಲಿ ಸಿಎಸ್ಪಿ ಕೇಂದ್ರಗಳು ಸೇರಿವೆ. ಈ ಎಲ್ಲಾ ಕೇಂದ್ರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಒಂಬತ್ತು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 340 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅದರಲ್ಲಿ 180 ಸಿಬ್ಬಂದಿಯನ್ನು ಕರಾವಳಿ ನಿಯಂತ್ರಣ ಪಡೆಗೆ ಸೇರಿಸಲಾಗಿದೆ. 13 ದೋಣಿಗಳು ಮತ್ತು ಜೆಟ್ ಸ್ಕೀ ಗಳನ್ನು ಬಳಸಿಕೊಂಡು 24/7 ಕಣ್ಗಾವಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕರಾವಳಿ ಭದ್ರತಾ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಅನಂತರದಲ್ಲಿ ಜಿಲ್ಲೆಯ ಕರಾವಳಿ ತೀರದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ನಿರಂತರ ಗಸ್ತು ಮುಂದುವರಿದಿದೆ. ಭಾರತೀಯ ಸೇನೆಯಿಂದ ತಡರಾತ್ರಿ ನಡೆದ ಆಫರೇಶನ್ ಸಿಂಧೂರ್ ಕಾರ್ಯಚರಣೆಯ ಅನಂತರ ಕರಾವಳಿ ಭಾಗದಲ್ಲಿ ಇನ್ನಷ್ಟು ಹೆಚ್ಚು ನಿಗಾ ವಹಿಸುವ ಕಾರ್ಯವನ್ನು ಕರಾವಳಿ ಕಾವಲು ಪಡೆ ಮಾಡುತ್ತಿದೆ.




