ಉಡುಪಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನ
ಉಡುಪಿ: ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಲ್ಪೆ ರಾಕೇಶ್ ಪೂಜಾರಿ(33) ಕುಸಿದು ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಅವರು ಕಳೆದ ರಾತ್ರಿ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಸಾಗಿಸಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಕೇಶ್ ಪೂಜಾರಿ ಅದಾಗಲೇ ಮೃಪಟ್ಟಿರುವುದಾಗಿ ತಿಳಿಸಿದ್ದಾರೆ.
ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ಚೈತನ್ಯ ಕಲಾವಿದರು ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್ ನಲ್ಲಿ ‘ಕಡ್ಲೆ ಬಜಿಲ್’ ಎಂಬ ತುಳು ರಿಯಾಲಿಟಿ ಶೋ ಮೂಲಕ ಅನೇಕ ಜನರ ಮನ ಗೆದ್ದಿದ್ದರು.
ನಂತರ ಹಲವು ಸಿನಿಮಾಗಳಿಗೆ ಆಡಿಷನ್ ನೀಡಿದರು. ಸುಮಾರು 150 ಆಡಿಷನ್ ನೀಡಿದ್ದ ರಾಕೇಶ್ ಪೂಜಾರಿ 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ ಶೋಗೆ ಸೆಲೆಕ್ಟ್ ಆದರು. ಇದರಲ್ಲಿ ರನ್ನರ್ ಅಪ್ ತಂಡದ ಸದಸ್ಯರಾಗಿದ್ದರು. ಬಳಿಕ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿಜೇತರಾಗಿದ್ದರು.
ನಟಿ ರಕ್ಷಿತಾ ಪ್ರೇಮ್ ಅವರು ರಾಕೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ‘ಮಿಸ್ ಯೂ ಮಗನೇ.. ನಾನು ಇನ್ಯಾವತ್ತೂ ನಿನ್ನ ಜೊತೆ ಮಾತನಾಡಲು ಆಗಲ್ಲ, ಕಾಮಿಡಿ ಕಿಲಾಡಿ ನನ್ನ ಹೃದಯಕ್ಕೆ ಹತ್ತಿರವಾದ ಕಾರ್ಯಕ್ರಮ. ನೀನು ಅದರಲ್ಲಿ ಒಂದು ಶಕ್ತಿ ಆಗಿದ್ದೆ. ನಿನ್ನಂತಹ ಅದ್ಭುತ ವ್ಯಕ್ತಿ ನಮ್ಮ ಹೃದಯಲ್ಲಿ ನೆಲೆಸಿರುತ್ತಾರೆ ಎಂದು ಪೋಸ್ಟ್ ಮಾಡಿದ್ದಾರೆ.





