ದೇರಳಕಟ್ಟೆ: ಕಣಚೂರು ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಪ್ರಕರಣ: ಆರೋಪಿ ವಿದ್ಯಾರ್ಥಿಯ ಬಂಧನ-ದೂರು ನೀಡಿದ ವಿದ್ಯಾರ್ಥಿಯೇ ಆರೋಪಿ
ದೇರಳಕಟ್ಟೆ: ಕಣಚೂರು ಆಸ್ಪತ್ರೆಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ದಿನಾಂಕ : 04-06-2025 ರಂದು ಬೆಳಿಗ್ಗೆ 8-45 ಗಂಟೆಗೆ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ ಪೊಲೀಸ್ ಠಾಣಾ ಸರಹದ್ದಿನ ದೇರಳಕಟ್ಟೆ ನಾಟೆಕಲ್ ರೋಡ್ನ ಕಣಚೂರು ಆಸ್ಪತ್ರೆಗೆ ಅನಾಮಧೇಯ ವ್ಯಕ್ತಿಯು ಕರೆ ಮಾಡಿ ಆಸ್ಪತ್ರೆಗೆ ಬಾಂಬ್ ಇರಿಸಲಾಗಿದೆ. 11-00 ಗಂಟೆಯೊಳಗಾಗಿ ಆಸ್ಪತ್ರೆಯನ್ನು ಖಾಲಿ ಮಾಡಬೇಕೆಂದು 5 ಬಾರಿ ಕರೆ ಮಾಡಿ ಬೆದರಿಕೆ ಹಾಕಿರುತ್ತಾರೆ. ಈ ಬೆದರಿಕೆಯ ಬಗ್ಗೆ ದೂರು ಬಂದ ಮೇರೆಗೆ 25-30 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು, ಬಾಂಬ್ ನಿಷ್ಕ್ರಿಯ ತಂಡ ಹಾಗೂ ಶ್ವಾನ ದಳ ತಂಡದೊಂದಿಗೆ ಆಸ್ಪತ್ರೆಯ ಸಂಪೂರ್ಣ ಕಟ್ಟಡ, ಆಸ್ಪತ್ರೆಯ ವಾಹನ ಪಾರ್ಕಿಂಗ್ ಸ್ಥಳ ಹಾಗೂ ಆಸ್ಪತ್ರೆಯ ಸುತ್ತಮುತ್ತಲಿನ ಪರಿಸರವನ್ನು ನಿರಂತರವಾಗಿ 10 ಗಂಟೆಗಳ ಕಾಲ ಪರಿಶೀಲಿಸಿದಾಗ ಯಾವುದೇ ರೀತಿಯ ಬಾಂಬ್ ಪತ್ತೆಯಾಗಿರುದಿಲ್ಲ. ಬಾಂಬ್ ಬೆದರಿಕೆ ಕರೆ ಹಿನ್ನಲೆಯಲ್ಲಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಯವರು ಹಾಗೂ ರೋಗಿಗಳು ಬೆದರಿಕೆಯ ಬಗ್ಗೆ ತುಂಬ ಆತಂಕಕ್ಕೆ ಒಳಗಾಗಿ ಭಯಬೀತರಾಗಿದ್ದರು.
ಪಿ.ಜಿ. ವಿದ್ಯಾರ್ಥಿನಿ ಡಾ|. ಶ್ರೀಮತಿ ಚಲಸಾನಿ ಮೋನಿಕಾ ಚೌಧರಿ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋನ್ ಕರೆ ಬಗ್ಗೆ ದೂರು ನೀಡಿದ ಮೇರೆಗೆ ಮೊ.ನಂ.89/2025 ಕಲಂ 352(2), 352(4) ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಾಗಿ ತನಿಖೆ ಕೈಗೊಂಡಿರುತ್ತದೆ. ಆರೋಪಿಯ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದ್ದು, ತಂಡದವರು ಆರೋಪಿ ಪತ್ತೆಗೆ ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಿದಾಗ ತನಿಖೆಯಿಂದ ಪಿ.ಜಿ. ವಿದ್ಯಾರ್ಥಿನಿ ಡಾ//. ಶ್ರೀಮತಿ ಚಲಸಾನಿ ಮೋನಿಕಾ ಚೌಧರಿ ಆರೋಪಿಯಾಗಿದ್ದು ಅವರೇ ವೈದ್ಯಕೀಯ ಕಾಲೇಜ್ನಲ್ಲಿ ಸ್ನಾತಕೋತರ ಪದವಿ ವ್ಯಾಸಂಗ ಮಾಡುತ್ತಿದ್ದು, ಬೆದರಿಕೆ ಹಾಕಿದ ದಿನಾಂಕದಂದು ಸಮಿನಾರ್ ನೀಡಬೇಕಾಗಿರುವುದರಿಂದ ಸಮಿನಾರ್ ತಪ್ಪಿಸುವ ಉದ್ದೇಶದಿಂದ ವಿದ್ಯಾರ್ಥಿನಿ ಎಸಗಿರುವುದು ತನಿಖೆಯಿಂದ ತಿಳಿದು ಬಂದಿದೆ. ಆರೋಪಿಯನ್ನು ದಿನಾಂಕ : 07-06-2025 ರಂದು ದಸ್ತಗಿರಿ ಮಾಡಿ,ಅವರ ಹೇಳಿಕೆ ಮೇಲೆ ಅವರ ಮೊಬೈಲ್ ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ.




